
ಮಂಡ್ಯ: ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, 13 ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಪಾಪಣ್ಣಚಾರಿ (50) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಕೂಡಲೇ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ದುರ್ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಮೃತಪಟ್ಟ ವ್ಯಕ್ತಿ ಹಾಗೂ ಗಾಯಾಳುಗಳ ಸಂಬಂಧಿಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ ಕಬಡ್ಡಿ ಆಯೋಜಕರ ವಿರುದ್ದ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ಘಟನೆಗೆ ಕಡಿಮೆ ಸಾಮರ್ಥ್ಯದ ಕಬ್ಬಿಣ ಬಳಕೆ ಮಾಡಿರುವುದು, ಸಾವಿರಾರು ಜನರು ಸೇರುವ ಜಾಗದಲ್ಲಿ ನೂರಾರು ಜನ ಕೂರುವ ಗ್ಯಾಲರಿ ಅಳವಡಿಕೆ ಮಾಡಿರುವುದು, ಇಂಟರ್ ಲಾಕ್ ಬಳಸದೆ ಇರುವುದು ಕಾರಣವೆಂದು ಹೇಳಲಾಗುತ್ತಿದೆ.
Advertisement