
ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತೆ ಸಮಿತಿಗೆ ದೂರು ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ಕಳೆದ ವಿಧಾನಮಂಡಲ ಅಧಿವೇಶನದ ವೇಳೆ ಬಿಜೆಪಿ ಶಾಸಕರ ಅಮಾನತು ಕುರಿತು ಪ್ರತಿಕ್ರಿಯಿಸಿದ್ದ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ವಿಶೇಷಾಧಿಕಾರ ಸಮಿತಿ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ವಿಡಿಯೋ ದೃಶ್ಯಾವಳಿ ಸೇರಿದಂತೆ ಸಾಕ್ಷ್ಯಗಳನ್ನು ವಿಶ್ಲೇಷಿಸಲಿದೆ ಎಂದು ಖಾದರ್ ತಿಳಿಸಿದರು.
ಕೆಲ ಶಾಸಕರಿಗೆ ಏನಾದರೂ ಮಾತನಾಡುವ ಚಾಳಿ ಇದೆ. ತಮಗೆ ಪ್ರಚಾರ ಸಿಗುತ್ತದೆ ಎಂದು ಆ ರೀತಿ ಮಾತನಾಡ್ತಾರೆ. ಅವರ ಹೇಳಿಕೆ ಸಂವಿಧಾನಕ್ಕೆ ಬದ್ಧವಾಗಿರಬೇಕು. ಈ ಕುರಿತು ಶಾಸಕರು ಹಕ್ಕುಚ್ಯುತಿ ಸಮಿತಿಗೆ ದೂರು ಕೊಟ್ಟಿದ್ದಾರೆ. ಸಮಿತಿಯೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು. ಸಮಿತಿಯು ಅವರ ಹೇಳಿಕೆಗಳು ಸಂವಿಧಾನದೊಂದಿಗೆ ಸಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತದೆ. ಶಾಸಕರುಗಳ ಹೇಳಿಕೆಗಳನ್ನು ನೀಡಿದ ಸಂದರ್ಭಕ್ಕೆ ಸಂಬಂಧಿಸಿದಂತೆ ಅವರು ವಿವರಣೆಯನ್ನು ಪಡೆಯುತ್ತಾರೆ. ಇದರಿಂದ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಮಿತಿಗೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ಒಬ್ಬರು ಶಾಸಕರಾಗುವುದಿಲ್ಲ. ಸಾಂವಿಧಾನಿಕ ಪ್ರಮಾಣ ವಚನ ಸ್ವೀಕರಿಸಿದ ನಂತರವೇ ಶಾಸಕರ ಅಧಿಕೃತ ಸ್ಥಾನಮಾನವನ್ನು ನೀಡಲಾಗುತ್ತದೆ. ಆದ್ದರಿಂದ, ಶಾಸಕರು ಸಾರ್ವಜನಿಕ ಬೆಂಬಲವನ್ನು ಲೆಕ್ಕಿಸದೆ ತಮ್ಮ ಹೇಳಿಕೆಗಳನ್ನು ಸಾಂವಿಧಾನಿಕ ತತ್ವಗಳೊಂದಿಗೆ ಜೋಡಿಸಬೇಕು" ಎಂದು ಅವರು ಹೇಳಿದರು.
18 ಬಿಜೆಪಿ ಶಾಸಕರ ಅಮಾನತು ವಿಚಾರವಾಗಿ ವಿಪಕ್ಷ ನಾಯಕರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದರು. ಆದರೆ, ಶಾಸಕಾಂಗದೊಳಗೆ ನಿರ್ಣಯ ಕೈಗೊಂಡಿರುವುದರಿಂದ ಅವರ ಅಮಾನತು ಹಿಂಪಡೆಯಲು ಮಾತ್ರ ಸಾಧ್ಯವಿಲ್ಲ ಎಂದರು.
ಪಹಲ್ಗಾಮ್ ಉಗ್ರರ ದಾಳಿ ಪ್ರಕರಣದಲ್ಲಿ 'ಯುದ್ಧ ಬೇಡ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, 'ನಮ್ಮ ದೇಶದ ಏಕತೆ, ಒಗ್ಗಟ್ಟನ್ನು ಮುರಿಬೇಕೆಂಬುದೇ ಈ ಸಂಚಿನ ಉದ್ದೇಶ.
ಅದಕ್ಕೆ ನಾವು ಆಸ್ಪದ ಕೊಡಬಾರದು. ದುರ್ಬಲಗೊಳಿಸಲು ನಾವು ಪ್ರಯತ್ನ ಪಟ್ಟರೆ ಸಂಚುಕೋರರಿಗೆ ಸಹಾಯ ಮಾಡಿದ ಹಾಗಾಗುತ್ತದೆ. ಕೃತ್ಯ ಎಸಗಿದರನ್ನು ಮತ್ತು ಬೆಂಬಲ ನೀಡಿದವರನ್ನು ಮಟ್ಟ ಹಾಕಬೇಕು. ಯುದ್ದ ನಡೆಸುವ ಬಗ್ಗೆ ಸರ್ವಪಕ್ಷ ಸಭೆ, ಅಧಿಕಾರಿಗಳು, ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ. ಈ ವಿಚಾರದಲ್ಲಿ ಇಡೀ ದೇಶ ಒಗ್ಗಟ್ಟಾಗಿರಬೇಕು' ಎಂದು ಹೇಳಿದರು.
Advertisement