
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳು ಕಳೆದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೈರದೇನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಚೊಚ್ಚಲ ಸಾಧನಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಸಮಾವೇಶದಲ್ಲಿ ಗ್ಯಾರಂಟಿ ಯೋಜನೆಗಳು, ಅವುಗಳಿಂದಾಗಿರುವ ಪ್ರಯೋಜನಗಳು, ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿದ ಪರಿಗಳನ್ನು ಪ್ರಸ್ತುತಪಡಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಸಚಿವರು ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟರು.
ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಐದು ಗ್ಯಾರಂಟಿಗಳ ರೂಪದಲ್ಲಿ ಎರಡು ವರ್ಷಗಳಲ್ಲಿ ಜನರಿಗೆ ಜೇಬಿಗೆ 80 ಸಾವಿರ ಕೋಟಿ ರೂ. ಹಾಕಿದ್ದೇವೆಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ.ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆಂದು ತಿಳಿಸಿದರು.
ಇದೇ ವೇಳೆ ಪಹಲ್ಗಾಮ್ ಉಗ್ರರ ದಾಳಿ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ. ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆಂದು ಹೇಳಿದರು.
ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ ಎಂದು ತಿಳಿಸಿದರು.
ಈ ಸಾಧನಾ ಸಮಾವೇಶದ ಮೂಲಕ ಪಕ್ಷ ವಿರೋಧಿ ಧೋರಣೆ ಮತ್ತು ಸರ್ಕಾರ ಜನರವಾಗಿದೆ ಎಂಬುದನ್ನು ಒತ್ತಿ ಹೇಳಲು ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಪ್ರದೇಶವಾರು ರ್ಯಾಲಿ ಆಯೋಜಿಸಲು ಮುಂದಾಗಿದೆ.
ಇದರಂತೆ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಮೆಗಾ ರ್ಯಾಲಿಯಲ್ಲಿ ಡಿಜಿಟಲ್ ಹಕ್ಕು ಪತ್ರಗಳನ್ನು ವಿತರಿಸಲಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ಎರಡು ವರ್ಷಗಳನ್ನು ಗುರುತಿಸಲು ಲಂಬಾಣಿಗಳು ಮತ್ತು ಕಾಡುಗೊಲ್ಲರು ಸೇರಿ ಮುಂತಾದ ಹಳ್ಳಿಗಳಲ್ಲಿ ವಾಸಿಸುವ 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳು ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಏಪ್ರಿಲ್ 29 ರಂದು, ಕಂದಾಯ ಇಲಾಖೆಯು ಜನರಿಗೆ ಡಿಜಿಟಲೀಕರಣಗೊಂಡ ಭೂ ದಾಖಲೆಗಳನ್ನು ಪಡೆಯಲು ಅವಕಾಶ ನೀಡುವ 'ಭೂಸುರಕ್ಷಾ' ಯೋಜನೆಯನ್ನು ಪ್ರಾರಂಭಿಸಲಿದೆ.
ನಂತರ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 17 'ಪ್ರಜಾ ಸೌಧ' (ತಾಲೂಕು ಕಚೇರಿಗಳು)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೇ 16 ರಂದು, ಮಂಗಳೂರಿನಲ್ಲಿ 'ಜಿಲ್ಲಾ ಸೌಧ' (ಉಪ ಆಯುಕ್ತರ ಕಚೇರಿ)ವನ್ನು ಉದ್ಘಾಟಿಸಲಿದ್ದಾರೆ, ಕಾರ್ಯಕ್ರಮದಲ್ಲಿ 'ಫೋಡಿ' ದುರಸ್ತಿ, ಕೃಷಿ ಭೂಮಿಯ ಉಪವಿಭಾಗ ಮತ್ತು ದಾಖಲೆಗಳನ್ನು ಸುಮಾರು 10,000 ರೈತರಿಗೆ ವಿತರಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೃಷ್ಣ ಬೈರೇಗೌಡ ಅವರು, ಕಂದಾಯ ಇಲಾಖೆಯ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆಯು ಕೇಂದ್ರದ ಆದೇಶದ ಭಾಗವಾಗಿದೆ, ಆದರೆ, ಕರ್ನಾಟಕದಲ್ಲಿ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸಲು ದಾಖಲೆಗಳ ಸ್ಕ್ಯಾನಿಂಗ್ ಅನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಮೂಲಕ ಒಂದು ಹೆಜ್ಜೆ ಮುಂದೆ ಹೋಗಲಾಗಿದೆ ಎಂದು ಹೇಳಿದ್ದಾರೆ.
ಕಂದಾಯ ಇಲಾಖೆ ಸುಧಾರಣೆಗಳಿಗೆ ಮುಕ್ತವಾಗಿದ್ದು, ಜನರೊಂದಿಗೆ ಇದೆ ಎಂಬ ಸಂದೇಶವನ್ನು ರವಾನಿಸಲು ಕೃಷ್ಣ ಬೈರೇಗೌಡ ಅವರು ಉನ್ನತ ಅಧಿಕಾರಿಗಳೊಂದಿಗೆ ಸರಣಿ ಪರಿಶೀಲನಾ ಸಭೆಗಳನ್ನು ನಡೆಸಿದ್ದಾರೆಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.
Advertisement