
ಮಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕೇರಳ ಮೂಲದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೊರೇಟರ್ರ ಪತಿಯನ್ನು ಬಂಧಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬುಧವಾರ ಒತ್ತಾಯಿಸಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಡಿಪಿಐ ನಾಯಕ ಜಲೀಲ್ ಕೃಷ್ಣಾಪುರ, "ಮುಸ್ಲಿಂ ಯುವಕನ ಹತ್ಯೆ ಪ್ರಕರಣದಲ್ಲಿ ಮಾಜಿ ಸ್ಥಳೀಯ ಬಿಜೆಪಿ ಕಾರ್ಪೊರೇಟರ್ ಸಂಗೀತಾ ನಾಯಕ್ ಅವರ ಪತಿ ರವೀಂದ್ರ ನಾಯಕ್ ಭಾಗಿಯಾಗಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಆರ್ಎಸ್ಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದೆಯೇ? ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರಾಲ್ ಗುಂಪು ಹತ್ಯೆಯನ್ನು ಒಂದು ಸಣ್ಣ ವಿಷಯವೆಂದು ಹೇಳಿದ್ದಾರೆ. ಆದರೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಗೃಹ ಸಚಿವರು ಆರೋಪಿಗಳ ಪರವಾಗಿ ಹೇಳಿಕೆ ನೀಡುತ್ತಿದ್ದಾರೆ. ಆಧಾರರಹಿತ ಹೇಳಿಕೆ ನೀಡಿದ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದರು.
ಯುವಕನನ್ನು ಆತನ ಧರ್ಮದ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ. ಈ ತಿಂಗಳು ಮಂಗಳೂರಿನಲ್ಲಿ ಎರಡು ಕೊಲೆಗಳು ನಡೆದಿವೆ. ಇದಕ್ಕೂ ಮೊದಲು ಮುಸ್ಲಿಂ ಆಟೋ ಚಾಲಕನನ್ನು ಕೊಲೆ ಮಾಡಲಾಗಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ ನಂತರ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ. ಮಾಜಿ ಕಾರ್ಪೊರೇಟರ್ ಅವರ ಪತಿ ರವೀಂದ್ರ ನಾಯಕ್ ಮತ್ತು ಪ್ರಮುಖ ಆರೋಪಿಗಳನ್ನು ಬಂಧಿಸಬೇಕು" ಎಂದು ಅವರು ಒತ್ತಾಯಿಸಿದರು.
ಏತನ್ಮಧ್ಯೆ, ಮತ್ತೊಬ್ಬ ಎಸ್ಡಿಪಿಐ ನಾಯಕ ರಿಯಾಜ್ ಕಡಂಬು ಮಾತನಾಡಿ, ಆರೋಪಿಗಳು ಕೊಲೆಯಾದ ಯುವಕನಿಗೆ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಮತ್ತು ಈ ಘಟನೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಪ್ರೇರಿತವಾಗಿ ನಡೆದಿದೆ. "ಬಲಿಪಶು ಅಶ್ರಫ್ ಮೇಲೆ ಹಲ್ಲೆ ನಡೆಸಿದ ನಂತರ, ಆರೋಪಿಗಳು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ್ದಾರೆ ಎಂದರು.
ಒಂದು ವೇಳೆ ಯುವಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೂ ಸಹ, ಆತನನ್ನು ಕೊಲೆ ಮಾಡಬೇಕಾಗಿರಲಿಲ್ಲ, ಬದಲಾಗಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬಹುದಿತ್ತು ಎಂದಿದ್ದಾರೆ.
Advertisement