
ಹುಬ್ಬಳ್ಳಿ: ಪ್ರಯಾಣಿಕರು ಇರುವಾಗಲೇ ಸರ್ಕಾರಿ ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ಚಾಲಕನೋರ್ವ ನಮಾಜ್ ಮಾಡುತ್ತಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ.
ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಸ್ ಚಾಲಕ ಬಸ್ ನಲ್ಲೇ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರಿಸಿ ಸಾಮಾಜಿಕ ಜಲಾತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಚಾಲಕನ ನಡೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಚಾಲಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.
ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಎ ಆರ್ ಮುಲ್ಲಾ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದಾರೆ.
ಏನಿದು ಪ್ರಕರಣ?
ಮಂಗಳವಾರ ಅಂದರೆ ಏಪ್ರಿಲ್ 29 ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಹೋಗುವ ಬಸ್ನ ಚಾಲಕ-ಕಂ-ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ಚಾಲಕ-ಕಂ-ನಿರ್ವಾಹಕ ನಮಾಜ್ ಮಾಡುತ್ತಿರುವುದನ್ನು ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರಿಗೆ ಪತ್ರ ಬರೆದಿದ್ದಾರೆ.
ತನಿಖೆಗೆ ಆದೇಶ
ಇನ್ನು ಚಾಲಕ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಲೇ ಪ್ರಕರಣದ ತನಿಖೆ ನಡೆಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಂಗ ಎಂ. ಅವರಿಗೆ ಸೂಚನೆ ನೀಡಿದ್ದಾರೆ. ತನಿಖೆ ನಡೆಸಿ ತಪ್ಪು ಕಂಡುಬಂದರೆ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ. ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಪತ್ರ ಬರೆದಿದ್ದಾರೆ.
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ. ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ ಕ್ರಮ ಜರುಗಿಸಿ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಎಂದು ಸೂಚನೆ ನೀಡಿದ್ದಾರೆ.
Advertisement