

ಬೆಂಗಳೂರು: ಐಎಎಸ್ ಅಧಿಕಾರಿ ಗೋವಿಂದ ರೆಡ್ಡಿ ಅವರನ್ನು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಲ್ಲಿ ಪ್ರಸ್ತುತ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ 2013 ರ ಬ್ಯಾಚ್ನ ಐಎಎಸ್ ಅಧಿಕಾರಿ ಗೋವಿಂದ್ ರೆಡ್ಡಿ ಅವರು, ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸೋಮವಾರ ಹೊರಡಿಸಲಾದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ(ಕರ್ನಾಟಕ) ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಕೆ-ರೈಡ್ನ ಪ್ರಮುಖ ಬೆಂಗಳೂರು ಉಪನಗರ ರೈಲ್ವೆ ಯೋಜನೆ(ಬಿಎಸ್ಆರ್ಪಿ) ಕಾಮಗಾರಿ ಗುತ್ತಿಗೆಯನ್ನು ಎಲ್ ಆ್ಯಂಡ್ ಟಿ ಕಂಪನಿ ರದ್ದುಪಡಿಸಿದ ಬೆನ್ನಲ್ಲೇ ಈ ನೇಮಕಾತಿ ನಡೆದಿದೆ.
ಜುಲೈ 31 ರಂದು, ಅಗತ್ಯ ಭೂಮಿ ಹಸ್ತಾಂತರಕ್ಕೆ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ(ಕೆ-ರೈಡ್) ತೋರಿದ ನಿರ್ಲಕ್ಷ್ಯವೇ ಕೆಲಸ ಸ್ಥಗಿತಕ್ಕೆ ಕಾರಣ ಎಂದು ಕಂಪನಿ ದೂರಿದ್ದರೆ, ಎಲ್ ಆ್ಯಂಡ್ ಟಿ ಸಮರ್ಪಕವಾಗಿ ಕೆಲಸ ಮಾಡದೆ ಕಾನೂನು ಬಾಹಿರವಾಗಿ ಗುತ್ತಿಗೆಯಿಂದ ಹಿಂದೆ ಸರಿದಿದೆ ಎಂದು ಕೆ-ರೈಡ್ ಹೇಳುತ್ತಿದೆ.
Advertisement