
ಬೆಂಗಳೂರು: ಹೈಕೋರ್ಟ್ ಮತ್ತು ಸಿನಿಲ್ ನ್ಯಾಯಾಲಯಕ್ಕೆ ಶುಕ್ರವಾರ ಇ-ಮೇಲ್ ಮೂಲಕ ಬಂದಿದ್ದ ಬಾಂಬ್ ಬೆದರಿಕೆಯ ಸಂದೇಶವೊಂದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತ್ತು.
ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಸಿಟಿ ಸಿವಿಲ್ ಕೋರ್ಟ್ನ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
‘ಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಅದು ಸ್ಫೋಟಗೊಳ್ಳಲಿದೆ’ ಎಂದು ಸಂದೇಶ ಕಳುಹಿಸಲಾಗಿತ್ತು. ತಮಿಳುನಾಡು ಸರ್ಕಾರ, ಅಲ್ಲಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಬಿಹಾರದ ಜನ ಸ್ವರಾಜ್ ಪಕ್ಷದ ಪ್ರಶಾಂತ್ ಕಿಶೋರ್, ಚುನಾವಣಾ ತಂತ್ರಜ್ಞ ಸುನಿಲ್ ಕನಗೋಲು ಇತ್ಯಾದಿ ಹೆಸರುಗಳನ್ನು ಇಮೇಲ್ನಲ್ಲಿ ಪ್ರಸ್ತಾಪಿಸಲಾಗಿದ್ದು, ಇಲ್ಲ-ಸಲ್ಲದ ವಿಚಾರಗಳನ್ನು ಉಲ್ಲೇಖಿಸಲಾಗಿತ್ತು.
ಕೂಡಲೇ ಕೋರ್ಟ್ ಸಿಬ್ಬಂದಿ ಹಲಸೂರು ಗೇಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ, ಇಡೀ ಕೋರ್ಟ್ ಆವರಣವನ್ನು ತಪಾಸಣೆ ನಡೆಸಿದ್ದರು. ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ತಪಾಸಣೆ ಬಳಿಕ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿರಲಿಲ್ಲ.
ತಪಾಸಣೆ ಬಳಿಕ ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಗೊತ್ತಾಗಿದೆ. ನಕಲಿ ಸಂದೇಶ ಕಳುಹಿಸಿದ್ದ ವ್ಯಕ್ತಿಯ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇ-ಮೇಲ್ ಕಳುಹಿಸಿದ ವ್ಯಕ್ತಿ VPN ಬಳಸಿ ರಷ್ಯಾದ ಇಮೇಲ್ ಸೇವೆಯಲ್ಲಿ ತಾತ್ಕಾಲಿಕ ಖಾತೆಯನ್ನು ರಚಿಸಿದ್ದಾರೆಂದು ತಿಳಿದುಬಂದಿದೆ.
Advertisement