
ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ 'ಪಪ್ಪಿ' ಅವರನ್ನು ಪ್ರಕರಣದ ಹೆಚ್ಚಿನ ತನಿಖೆಗಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಭಾನುವಾರ ಬೆಂಗಳೂರಿಗೆ ಕರೆತಂದಿದ್ದಾರೆ.
ಮೂಲಗಳ ಪ್ರಕಾರ, ಇ.ಡಿ ವಶದಲ್ಲಿರುವ ಶಾಸಕರನ್ನು ಭಾನುವಾರ ಬೆಳಿಗ್ಗೆ ಸಿಕ್ಕಿಂನಿಂದ ಕರೆತರಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಇ.ಡಿ ವಿಶೇಷ ತಂಡ ಅವರನ್ನು ವಶಕ್ಕೆ ತೆಗೆದುಕೊಂಡಿತು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ಅಧಿಕಾರಿಗಳು ವೀರೇಂದ್ರ ಅವರನ್ನು ಮಾಧ್ಯಮಗಳಿಂದ ದೂರವಿಟ್ಟು, ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದರು.
ಪಪ್ಪಿ (50), ಅವರ ಸಹೋದರ ಮತ್ತು ಇತರರ ವಿರುದ್ಧ ಶುಕ್ರವಾರ ಅಕ್ರಮ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಭಾಗವಾಗಿ ಕೇಂದ್ರದ ತನಿಖಾ ಸಂಸ್ಥೆಯು ಕರ್ನಾಟಕದ ಚಿತ್ರದುರ್ಗ, ಬೆಂಗಳೂರು ಮತ್ತು ಹುಬ್ಬಳ್ಳಿ, ಜೋಧ್ಪುರ (ರಾಜಸ್ಥಾನ), ಮುಂಬೈ ಮತ್ತು ಗೋವಾದ ಕನಿಷ್ಠ 30 ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿದೆ.
ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊ ಎಂಬ ಹೆಸರಿನ ಗೋವಾದ ಐದು ಕ್ಯಾಸಿನೊಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
'ಅಕ್ರಮ' ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಶೋಧ ನಡೆಸಲಾಗಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.
ವೀರೇಂದ್ರ ಅವರು King567, Raja567, Puppy's003, Rathna Gaming ಮುಂತಾದ ಆನ್ಲೈನ್ ಬೆಟ್ಟಿಂಗ್ ಸೈಟ್ಗಳನ್ನು ನಡೆಸುತ್ತಿದ್ದಾರೆ ಮತ್ತು ಅವರ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟೆಕ್, TRS ಟೆಕ್ನಾಲಜೀಸ್ ಮತ್ತು ಪ್ರೈಮ್9ಟೆಕ್ನಾಲಜೀಸ್ ಎಂಬ ಮೂರು ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಗಳು ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಪಟ್ಟಿವೆ ಎಂದು ಆರೋಪಿಸಲಾಗಿದೆ.
ಮೂಲಗಳ ಪ್ರಕಾರ, ಬೆಂಗಳೂರಿನಲ್ಲಿರುವ ಕಾಂಗ್ರೆಸ್ ನಾಯಕಿ ಕುಸುಮಾ ಎಚ್ ಅವರ ಸಹೋದರ ಅನಿಲ್ ಗೌಡ ಅವರ ನಿವಾಸದಲ್ಲಿಯೂ ಶೋಧ ನಡೆಸಲಾಗಿದೆ.
Advertisement