

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಆ ಮೂಲಕ ಅಧಿಕಾರಿಗಳಾದ ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ.
ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಲಾಗಿದೆ.
ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು.
ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ.
ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್ಡಿಎಸ್ಎಸ್ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ.
ಇದಕ್ಕೆ ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
Advertisement