

ಬೆಂಗಳೂರು: ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ನ್ಯಾಯಾಲಯ ಶಾಕ್ ನೀಡಿದೆ.
ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದಾಗಿ ಜಾಮೀನಿನ ಮೇಲೆ ಹೊರಗಿರುವ ಸೂರಜ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಈ ಕುರಿತು ನ್ಯಾಯಾಲಯ ಮಂಗಳವಾರ ವಿಚಾರಣೆ ನಡೆಸಿತು. ಈ ವೇಳೆ ತನಿಖಾಧಿಕಾರಿಗಳು ಸೂರಜ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಬಿ ರಿಪೋರ್ಟ್ ತಿರಸ್ಕರಿಸಿದೆ. ಜೊತೆಗೆ ತನಿಖೆ ಮುಂದುವರೆಸಿ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್ ವಿರುದ್ಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಸೂರಜ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಈ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ಬಳಿಕ ಸೂರಜ್ ರೇವಣ್ಣ ಅವರು ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು.
Advertisement