

ಮೈಸೂರು: ಸ್ಥಳೀಯವಾಗಿ ಉತ್ಪಾದನೆಯಾಗುವ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಯೂನಿಟಿ ಮಾಲ್ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ ನಂ.1ರ 6.5 ಎಕರೆ ಪ್ರದೇಶದಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ಕೆಲ ತಿಂಗಳುಗಳ ಹಿಂದಷ್ಟೆ ಚಾಲನೆ ಚಾಲನೆ ನೀಡಲಾಗಿತ್ತು.
ಮೇಕ್ ಇನ್ ಇಂಡಿಯಾ ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಲ್ಲಿ 193 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಈ ಯುನಿಟಿ ಮಾಲ್ ನಿರ್ಮಾಣಕ್ಕೆ ಮುಂದಾಗಿತ್ತು. ಇದೀಗ ಯುನಿಟಿ ಮಾಲ್ ನಿರ್ಮಾಣ ಮಾಡದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ.
ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ಇದೇ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದಿದ್ದಾರೆ.
ಮೈಸೂರು ಕಸಬಾ ಹೋಬಳಿಯ ಸರ್ವೆ ನಂ.1 ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿಯಲ್ಲಿ ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದಕ್ಕೆ ನನ್ನ ವಿರೋಧವಿಲ್ಲ. ಬಹಿರಂಗ ಮತ್ತು ಅಂತರಂಗ ಜಗಳ ವಿಚಾರವೂ ಇಲ್ಲಿ ಇಲ್ಲ. ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ ಅದಕ್ಕೆ ನನ್ನ ವಿರೋಧ ಇಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಅದರ ಬದಲು ಈ ನಿರ್ದಿಷ್ಟ ಖಾಸಗಿ ಆಸ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದು ಭಾರತ ಸರ್ಕಾರ ಮತ್ತು ಅಂದಿನ ರಾಜ್ಯ ಸರ್ಕಾರದ ನಡುವೆ ರಾಜ್ಯಗಳ ವಿಲೀನದ ಸಮಯದಲ್ಲಿ, ನಂತರದ ಒಪ್ಪಂದದ ದಿನಾಂಕವಾದ ಜನವರಿ 23, 1950 ರಂದು ಇತ್ಯರ್ಥವಾಗಿದೆ. ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿದ್ದು ಆ ಕೆಲಸವನ್ನು ನಾನು ಮಾಡಿದ್ದೇನೆ. ನಾನು ಸಲ್ಲಿಸಿದ ಅರ್ಜಿಯಲ್ಲಿ ನನ್ನ ನಿಲುವನ್ನು ದೃಢೀಕರಿಸಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಲಾಗಿದೆ. ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ.
ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜುಲೈ 27 ರಂದು ಮೈಸೂರಿನ ಕಸಬಾ ಹೋಬಳಿಯ ಸರ್ವೆ ಸಂಖ್ಯೆ 1 ರಲ್ಲಿ 6.05 ಎಕರೆ ಭೂಮಿಯಲ್ಲಿ ಯೋಜನೆಗೆ ಅಡಿಪಾಯ ಹಾಕಿದ್ದರು. ಮೈಸೂರು ದಸರಾ ಪ್ರದರ್ಶನ ಮೈದಾನದ ಒಟ್ಟು ವಿಸ್ತೀರ್ಣ 80 ಎಕರೆಯಿದೆ.
Advertisement