

ನವದೆಹಲಿ/ಬೆಂಗಳೂರು: ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದ್ದರೂ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಯಾವುದೇ ಔಪಚಾರಿಕ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಲೋಕಸಭೆಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಅಥವಾ ವಾಣಿಜ್ಯ ಪ್ರಯಾಣಿಕರ ಕಾರ್ಯಾಚರಣೆಗಾಗಿ HAL ವಿಮಾನ ನಿಲ್ದಾಣವನ್ನು ಪುನಃ ತೆರೆಯುವ ಪ್ರಸ್ತಾವನೆಗಳ ಕುರಿತು ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವರು ಈ ಉತ್ತರ ನೀಡಿದರು.
ನಾಗರಿಕ ವಿಮಾನಯಾನ ಸಚಿವಾಲಯದ ಪರವಾಗಿ ಉತ್ತರಿಸಿದ ಸಚಿವರು, ಕರ್ನಾಟಕ ಸರ್ಕಾರದ ಕೋರಿಕೆಯ ಮೇರೆಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಮೂರು ಸ್ಥಳಗಳಲ್ಲಿ ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿತ್ತು. ಪೂರ್ವ-ಕಾರ್ಯಸಾಧ್ಯತಾ ವರದಿಯನ್ನು ಈಗಾಗಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದಾಗ್ಯೂ, ಕರ್ನಾಟಕ ಸರ್ಕಾರ ಅಥವಾ ಯಾವುದೇ ಖಾಸಗಿ ವಿಮಾನ ನಿಲ್ದಾಣ ಬಂಡವಾಳಗಾರರು ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ (GFA) ನೀತಿಯಡಿಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಸ್ತಾವನೆಯನ್ನು ಸಲ್ಲಿಸಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಭಾರತ ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನಡುವಿನ ಒಪ್ಪಂದದ ಪ್ರಕಾರ, ದೇಶೀಯ ವಿಮಾನ ನಿಲ್ದಾಣಗಳಾಗಿ ಗೊತ್ತುಪಡಿಸಲಾದ ಮೈಸೂರು ಮತ್ತು ಹಾಸನ ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 150 ಕಿಮೀ ವ್ಯಾಪ್ತಿಯೊಳಗೆ ಯಾವುದೇ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವಂತಿಲ್ಲ ಎಂದು ಸಚಿವರು ಹೇಳಿದರು.
ಒಪ್ಪಂದದ ಪ್ರಕಾರ, 25 ವರ್ಷಗಳ ಷರತ್ತು ಅವಧಿ ಮುಗಿಯುವ ಮೊದಲೇ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಅಥವಾ HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯುವ ಯಾವುದೇ ಕ್ರಮಕ್ಕೆ BIAL ನಿಂದ ಪೂರ್ವಾನುಮತಿ ಅಗತ್ಯವಿರುತ್ತದೆ ಎಂದು ಸಚಿವಾಲಯ ಹೇಳಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೆಚ್ಚುತ್ತಿರುವ ಪ್ರಯಾಣದ ಒತ್ತಡದಿಂದಾಗಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾಪ ಹೇಳಿಬಂದಿತ್ತು.
Advertisement