

ಬೆಂಗಳೂರು: ಚಾಮರಾಜನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ ತಾಯಿ ಹುಲಿ ಹಾಗೂ ಅದರ 4 ಮರಿಗಳ ಚಲನವಲನಗಳ ಮೇಲೆ ಸತತ ನಿಗಾ ಇರಿಸುವಂತೆ ಸಚಿವ ಈಶ್ವರ್ ಖಂಡ್ರೆಯವರು ಮಂಗಳವಾರ ಹೇಳಿದ್ದಾರೆ.
ವಿಡಿಯೊ ಸಂವಾದದ ಮೂಲಕ ಮಂಗಳವಾರ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಜನರ ಸುರಕ್ಷತೆಗಾಗಿ ಐದು ಹುಲಿಗಳನ್ನು ಸೆರೆ ಹಿಡಿಯಲು ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಸೂಚನೆ ನೀಡಿದರು.
ಹುಲಿಗಳ ಚಲನವಲನದ ಮೇಲೆ ಸತತ ನಿಗಾ ಇಡುವುದು ಅತ್ಯಗತ್ಯವಾಗಿದ್ದು, ಡ್ರೋನ್ ಕ್ಯಾಮೆರಾಗಳು, ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ಹುಲಿಗಳು ಎಲ್ಲಿವೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಗ್ರಾಮಗಳಿಗೆ ಬಂದರೆ ಗ್ರಾಮಸ್ಥರಿಗೆ ಕೂಡಲೇ ಮಾಹಿತಿ ನೀಡಬೇಕು. ಅಲ್ಲಿಗೆ ಅರಣ್ಯ ಇಲಾಖೆಯ ತಂಡಗಳನ್ನು ಕಳುಹಿಸಿ ಯಾವುದೇ ಅನಾಹುತ ಆಗದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
5 ಹುಲಿಗಳ ಕಾರ್ಯಾಚರಣೆ ಸುಲಭದ ಕೆಲಸವಲ್ಲ ಎಂಬುದು ನಮಗೂ ತಿಳಿದಿದೆ. ಹುಲಿಗಳನ್ನು ಹಿಡಿಯುವಾಗ ಹುಲಿಗಳು ಕಾರ್ಯಾಚರಣೆ ತಂಡದ ಮೇಲೆ ದಾಳಿ ಮಾಡದಂತೆ ಮತ್ತು ಬಡಗಲಪುರದಲ್ಲಿ ಹುಲಿ ರಕ್ಷಣೆ ಕಾರ್ಯಾಚರಣೆ ವೇಳೆ ವ್ಯಕ್ತಿಯ ಮೇಲೆ ದಾಳಿ ಆದಂತಹ ಪ್ರಕರಣಗಳು ಮರುಕಳಿಸದಂತೆ ಹಿರಿಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದರು.
ಹುಲಿಗಳ ರಕ್ಷಣೆ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಸಲಕರಣೆ, ಹೆಚ್ಚುವರಿ ಪಶುವೈದ್ಯರು, ಶಾರ್ಪ್ ಶೂಟರ್ಗಳನ್ನು ಸಹ ನಿಯೋಜನೆ ಮಾಡುವಂತೆ ಹಾಗೂ ಹೆಚ್ಚುವರಿಯಾಗಿ ಆನೆಗಳನ್ನು ತಕ್ಷಣವೇ ತರಿಸಿಕೊಳ್ಳುವಂತೆಯೂ ಸೂಚನೆ ನೀಡಿದರು.
ಜನರ ಜೀವದ ಸುರಕ್ಷತೆ ಅತ್ಯಂತ ಪರಮೋಚ್ಚವಾದ್ದು, ಅದೇ ವೇಳೆ ವನ್ಯಜೀವಿಗಳ ರಕ್ಷಣೆಯೂ ಅಷ್ಟೇ ಮುಖ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ನಡೆಸಬೇಕು. ಸಿಬ್ಬಂದಿಯ ಸುರಕ್ಷತೆಗೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಜೊತೆಗೆ ಜನರು ಯಾರೂ ಕಾರ್ಯಾಚರಣೆ ಸ್ಥಳಕ್ಕೆ ಬಾರದಂತೆ ಸೆಕ್ಷನ್ 144 ನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚನೆ ನೀಡಿದರು.
Advertisement