

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿತ್ತು.
ದುರ್ಘಟನೆಯಲ್ಲಿ ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಎಂಬುವವರು ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
Advertisement