News headlines 02-02-2025 | Microfinance ಸುಗ್ರೀವಾಜ್ಞೆಯ ಕರಡು ಸಿದ್ಧ; CM ಗೆ ಅನಾರೋಗ್ಯ, 2 ದಿನ ವಿಶ್ರಾಂತಿ; ಸರ್ಕಾರದಿಂದ ಕಾರ್ಖಾನೆ ಮುಚ್ಚಿಸಲು ಷಡ್ಯಂತ್ರ-HDK; ಮತ್ತೋರ್ವ ನಕ್ಸಲ್ ಶರಣಾಗತಿ

News headlines
ಸುದ್ದಿ ಮುಖ್ಯಾಂಶಗಳುonline desk

1. Microfinance ಸುಗ್ರೀವಾಜ್ಞೆಯ ಕರಡು ಸಿದ್ಧ

ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹೊಸ ಕಾನೂನು ಜಾರಿಗೆ ತರಲು ತೀರ್ಮಾನಿಸುವ ಸರ್ಕಾರ ಸುಗ್ರೀವಾಜ್ಞೆಯ ಕರಡನ್ನು ಸಿಎಂ ಗೆ ಕಳಿಸಿದೆ. ಇದೇ ವೇಳೆ ಸಾಲ ವಿತರಣೆಗಳ ವಿವರಗಳನ್ನು ಪತ್ತೆಹಚ್ಚಲು ಮತ್ತು ನವೀಕರಿಸಲು ಆನ್‌ಲೈನ್ ಪೋರ್ಟಲ್ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರವನ್ನು ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC - AC ಒಳಗೊಂಡ ಒಂಬುಡ್ಸ್ಮನ್ ನೇಮಕ ಮಾಡಬೇಕು. ಕಂಪೆನಿಗಳು ಸಾಲದ ಹೆಸರಲ್ಲಿ ಬಡ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ. ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬ ಅಂಶಗಳನ್ನು ಕಾನೂನಿನಲ್ಲಿ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

2. ಮತ್ತೋರ್ವ ನಕ್ಸಲ್ ಶರಣಾಗತಿ

ಹಲವು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ನಕ್ಸಲ್ ಲಕ್ಷ್ಮೀ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಇಂದು ಶರಣಾದರು. ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆ ನಕ್ಸಲ್ ಲಕ್ಷ್ಮಿ ಪೊಲೀಸ್ ಕಚೇರಿಗೆ ಆಗಮಿಸಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ನಕ್ಸಲ್‌ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆಯ ವಿಕ್ರಂಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಲಕ್ಷ್ಮೀ 2006 ಮಾರ್ಚ್ 6ರಂದು ಊರು ತೊರೆದಿದ್ದರು.

3. ಮಹಿಳೆ ಮೇಲೆ ಹರಿದBMTC 

ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಬಿಎಂಟಿಸಿ ಹರಿದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಬಳಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಸರೋಜಾ ಮೃತ ದುರ್ದೈವಿ. ಜ್ಞಾನಭಾರತಿಯಲ್ಲಿ ಮದುವೆ ಮುಗಿಸಿಕೊಂಡು ಸೋದರನ ಜೊತೆ ದ್ವಿಚಕ್ರವಾಹನದಲ್ಲಿ ಆಕೆ ತೆರಳುತ್ತಿದ್ದರು.ದಾರಿಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆರೆದಿದೆ. ಇದರಿಂದ, ಡೋರ್​​ಗೆ ಟಚ್ ಆಗಿ ಬೈಕ್​ನ ಹಿಂಬದಿ ಕುಳತಿದ್ದ ಸರೋಜಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಮೇಲೆ ಹರಿದಿದೆ. ಸರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

4. CM ಗೆ ಅನಾರೋಗ್ಯ; 2 ದಿನ ವಿಶ್ರಾಂತಿಗೆ ವೈದ್ಯರ ಸಲಹೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿತ್ತು. ಇಂದು ಸಿಎಂ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ಕೈಗೊಳ್ಳಬೇಕಿತ್ತು. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಡಾ. ಸತ್ಯನಾರಾಯಣ ತಪಾಸಣೆ ನಡೆಸಿದ್ದು 2 ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿ ಡಿಸ್ಚಾರ್ಜ್ ಮಾಡಿದ್ದಾರೆ.

5. ಸರ್ಕಾರದಿಂದ ಕಾರ್ಖಾನೆ ಮುಚ್ಚಿಸಲು ಷಡ್ಯಂತ್ರ-HDK

ತಮ್ಮ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರದ ಸಚಿವ ಎಚ್. ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕೇಂದ್ರ ಸಚಿವರು, ನಾನು ಕೇಂದ್ರ ಮಂತ್ರಿಯಾಗಿ ಏಳು ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲಾ ಕಾರ್ಖಾನೆ, ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸಿನಿಂದ ಪುರಸ್ಕರಿದ್ದಾರೆ. ಆದರೆ, ಕರ್ನಾಟಕಕ್ಕೆ ಇಂತಹದ್ದು ಬೇಕು ಎಂದು ರಾಜ್ಯದಿಂದ ಯಾರೊಬ್ಬರೂ ನನ್ನ ಮುಂದೆ ಬಂದು ಚರ್ಚೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಸಹಿ ಹಾಕಿದ್ದೇ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಉಳಿಸುವ ಕಡತಕ್ಕೆ. 2011ರಲ್ಲಿ ಸಿದ್ದರಾಮಯ್ಯ ಅವರ ಸರಕಾರವೇ ಒಪ್ಪಿಗೆ ನೀಡಿದ್ದ ಸಂಡೂರಿನ ದೇವದಾರಿ ಗಣಿ ಯೋಜನೆ ಅನುಷ್ಠಾನಕ್ಕೆ ಹಣಕಾಸು ನೆರವು ಪಡೆಯಲು ಅನುಮತಿ ಕೊಡುವ ಬಗ್ಗೆ ಹಣಕಾಸು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದೆ. ರಾಜಕೀಯ ಹಗೆತನಕ್ಕೆ ನನ್ನ ಒಳ್ಳೆಯ ಪ್ರಯತ್ನಕ್ಕೆ ವ್ಯವಸ್ಥಿತವಾಗಿ ಅಡ್ಡಿಪಡಿಸಿದರು ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com