
ಬೆಂಗಳೂರು: ಸಾರಿಗೆ ಬಸ್ ಗಳ ಶೇ.15ರಷ್ಟು ದರ ಏರಿಕೆಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಎತ್ತಿನ ಬಂಡಿ ಎಳೆಯುವ ಮೂಲಕ ಶನಿವಾರ ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದ ಎತ್ತಿನ ಬಂಡಿ ಗ್ಯಾರಂಟಿ, ಸರ್ಕಾರ ಜಾಲಿ ಜಾಲಿ-ಜನರ ಜೇಬು ಖಾಲಿ ಖಾಲಿ ಎಂದು ಘೋಷಣೆ ಕೂಗುವ ಮೂಲಕ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.
ಪ್ರತಿಭಟನೆಗೆ ನೇತೃತ್ವವನ್ನು ವಹಿಸಿದ್ದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರವು ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ನಕಲು ಮಾಡಿ ಅಧಿಕಾರ ಹಿಡಿದಿದೆ. ಆದರೆ, ಭ್ರಷ್ಟಾಚಾರ ನಿಲ್ಲಿಸದೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ವಿಫಲವಾಗಿದೆ. ಇದಕ್ಕಾಗಿ ದರ ಏರಿಕೆಗಳನ್ನು ಮಾಡುತ್ತಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ 2 ಬಜೆಟ್ ಗಳಲ್ಲಿ 2 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ದುಡ್ಡು ಯಾರ ಜೇಬು ಸೇರುತ್ತಿದೆ ಎಂಬುದನ್ನು ಜನತೆಗೆ ತಿಳಿಸಬೇಕು. ಈಗಾಗಲೇ ಸ್ಟ್ಯಾಂಪ್ ಡ್ಯೂಟಿ, ಅಬಕಾರಿ ಸುಂಕ, ವಿದ್ಯುತ್ ದರ, ಹಾಲಿನ ದರ ಎಲ್ಲವನ್ನು ಗಗನಕ್ಕೆ ಮುಟ್ಟಿಸಿದ್ದಾರೆ. ಈಗ ಬಸ್ ದರ ಏರಿಸಿದ್ದಾರೆ,
ಮುಂದಿನ ದಿನಗಳಲ್ಲಿ ನೀರಿನ ದರವನ್ನು ಏರಿಸುತ್ತಿದ್ದಾರೆ. ಈ ರೀತಿಯ ಜನ ಪರ ಕಾಳಜಿ ಇಲ್ಲದ ಕಾಂಗ್ರೆಸ್ ಸರ್ಕಾರವು ಆರ್ಥಿಕ ದಿವಾಳಿಯಾಗುವ ಹಂತಕ್ಕೆ ತಲುಪಿರುವ ಅನುಮಾನ ಜನತೆಯಲ್ಲಿ ಕಾಡುತ್ತಿದೆ. ಬಸ್ ದರ ಏರಿಕೆಯನ್ನು ಈ ಕೂಡಲೇ ಹಿಂಪಡೆಯದಿದ್ದಲ್ಲಿ ಪಕ್ಷವು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯನ್ನು ನಡೆಸುತ್ತದೆ ಎಂದು ಎಚ್ಚರಿಸಿದರು.
Advertisement