ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ವೃಷಭಾವತಿ ನದಿ ಪುನಶ್ಚೇತನಕ್ಕೆ ಸಮಗ್ರ ಯೋಜನೆ ರೂಪಿಸಿ: ಅಧಿಕಾರಿಗಳಿಗೆ BBMP ಸೂಚನೆ

ಜಲಮಂಡಳಿಯಿಂದ ಎಷ್ಟು ಎಸ್​ಟಿಪಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸ ಎಸ್​ಟಿಪಿಗಳ ನಿರ್ಮಾಣ ಸಂಬಂಧ ಯಾವ ರೀತಿಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ನೀಡಬೇಕು.
Published on

ಬೆಂಗಳೂರು: ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಹರಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸುವಂತೆ ಜಲಮಂಡಳಿ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಶನಿವಾರ ಸೂಚನೆ ನೀಡಿದೆ.

ವೃಷಭಾವತಿ ನದಿ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶನಿವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸುವಂತೆ ಪಾಲಿಕೆ, ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ವೃಷಭಾವತಿ ನದಿಗೆ ಎಲ್ಲೆಲ್ಲಿ ಕೊಳಚೆ ನೀರು ಬರುತ್ತಿದೆ ಎಂಬುದನ್ನು ಪರಿಶೀಲಿಸಿ ಪಟ್ಟಿ ಮಾಡಬೇಕು. ನದಿ ಬದಿಯಲ್ಲಿರುವ ಅಪಾರ್ಟ್​ಮೆಂಟ್​ಗಳಿಂದ ಕೊಳಚೆ ನೀರು ಹರಿಯುತ್ತಿರುವ ಕುರಿತು ಪರಿಶೀಲಿಸಬೇಕು. ಅಪಾರ್ಟ್​ಮೆಂಟ್​ಗಳಲ್ಲಿ ಅಳವಡಿಸಿರುವ ತ್ಯಾಜ್ಯನಿರು ಸಂಸ್ಕರಣಾ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲಿಸಬೇಕು. ಪಾಲಿಕೆ, ಜಲಮಂಡಳಿ,ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ಸಮಗ್ರ ಯೋಜನೆ ರೂಪಿಸಬೇಕು.

ಜಲಮಂಡಳಿಯಿಂದ ಎಷ್ಟು ಎಸ್​ಟಿಪಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸ ಎಸ್​ಟಿಪಿಗಳ ನಿರ್ಮಾಣ ಸಂಬಂಧ ಯಾವ ರೀತಿಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ನೀಡಬೇಕು. ಕೊಳಚೆ ನೀರು ನದಿಗೆ ಸೇರುತ್ತಿರುವುದನ್ನು ಗುರುತಿಸಿ ಅದನ್ನು ಪೈಪ್​ ಮೂಲಕ ಎಸ್​ಟಿಪಿಗೆ ಹೋಗುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಅವಳಿ ಸುರಂಗ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ನಿರ್ಧಾರ

ವೃಷಭಾವತಿ ನದಿಗೆ ಹೊಂದಿಕೊಂಡಂತೆ 42 ಕೆರೆಗಳು ಬರಲಿದ್ದು, ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಬೇಕು. ಜಿಲ್ಲಾಧಿಕಾರಿಗಳ ಬಳಿ ಬಾಕಿಯಿರುವ ಪ್ರಕರಣಗಳ ಪೈಕಿ ಭೂಮಾಪಕರಿಂದ ಸಮೀಕ್ಷೆ ನಡೆಸಿ, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ವೃಷಭಾವತಿ ನದಿಗೆ ಕಸ ಹಾಕದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಫೆನ್ಸಿಂಗ್ ಅಳವಡಿಸುವ ಕೆಲಸ ಮಾಡಬೇಕು. ಜೆಸಿಬಿಗಳನ್ನು ಇಟ್ಟು ಹೂಳೆತ್ತುವ ಕಾರ್ಯವನ್ನು ನಡೆಸಬೇಕು. ವೃಷಭಾವತಿ ವ್ಯಾಲಿಯಲ್ಲಿ ಸಂಪೂರ್ಣವಾಗಿ ಹೂಳೆತ್ತಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ 28.08 ಕಿ.ಮೀ ವ್ಯಾಪ್ತಿಯಲ್ಲಿ ವೃಷಭಾವತಿ ವ್ಯಾಲಿ ಬರಲಿದೆ. ವಿ -100 ವ್ಯಾಲಿ ಸ್ಯಾಂಕಿ ಕೆರೆಯಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಬರಲಿದ್ದು, ವಿ-200 ವ್ಯಾಲಿ ಗೊರಗುಂಟೆ ಪಾಳ್ಯ(ಪೀಣ್ಯ ಮೆಟ್ರೊ ನಿಲ್ದಾಣ)ದಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಚಾಚಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಅರಣ್ಯ, ಪರಿಸರ ಹಾಗೂ ಹವಾಮಾನ ವೈಪರೀತ್ಯ ವಿಭಾಗದ ವಿಶೇಷ ಆಯುಕ್ತರಾದ ಶ್ರೀಮತಿ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಶ್ರೀಮತಿ ರಮ್ಯ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು(ಕೆರೆಗಳು) ವಿಜಯ್ ಕುಮಾರ್ ಹರಿದಾಸ್, ಪಾಲಿಕೆ, ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com