ನ್ಯಾಯಯುತ ವೇತನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗೆ ಮುಖ್ಯವಾಗಿರುವ ಈ ಕಾರ್ಯಕರ್ತರು, ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಪೂರೈಸಲು ಹೆಚ್ಚುವರಿ 2,000 ರೂ.ಗಳ ಜೊತೆಗೆ ರೂ 15,000 ನಿಗದಿತ ಮಾಸಿಕ ಗೌರವಧನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಆಶಾ ಕಾರ್ಯಕರ್ತೆಯರು.
ಆಶಾ ಕಾರ್ಯಕರ್ತೆಯರು.
Updated on

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾವಿರಾರು ಆಶಾ (ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು) ಕಾರ್ಯಕರ್ತೆಯರು ಮಂಗಳವಾರದಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗೆ ಮುಖ್ಯವಾಗಿರುವ ಈ ಕಾರ್ಯಕರ್ತರು, ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಪೂರೈಸಲು ಹೆಚ್ಚುವರಿ 2,000 ರೂ.ಗಳ ಜೊತೆಗೆ ರೂ 15,000 ನಿಗದಿತ ಮಾಸಿಕ ಗೌರವಧನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಬೇಡಿಕೆಗಳನ್ನು ಸರಕಾರ ಈಡೇರಿಸುವವರೆಗೆ ಪ್ರತಿಭಟನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಅಖಿಲ ಭಾರತ ಸಂಯುಕ್ತ ಕಾರ್ಮಿಕ ಸಂಘ ಕೇಂದ್ರ (ಎಐಯುಟಿಯುಸಿ) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ)ದ ಸದಸ್ಯರು ಹೇಳಿದ್ದಾರೆ.

ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಕರ್ನಾಟಕದಲ್ಲಿ ರೋಗಗಳು, ಅಪೌಷ್ಟಿಕತೆ, ಮಕ್ಕಳ ಮರಣದ ವಿರುದ್ಧ ಹೋರಾಡುವ ಮತ್ತು ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಆರೋಗ್ಯ ಸೇವೆಗಳ ಬೆನ್ನೆಲುಬಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಆಶಾ ಕಾರ್ಯಕರ್ತೆಯರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಆದರೆ, ಅವರಿಗೆ ನಿಗದಿತ ಗೌರವಧನ ನೀಡಲಾಗುತ್ತಿಲ್ಲ. ಹೀಗಾಗಿ ಮಾಸಿಕ ಗೌರವಧನ 15,000 ರೂ.ಗಳನ್ನು ನಿಗದಿಪಡಿಸುವಂತೆ ಆಗ್ರಹಿಸುತ್ತಿದ್ದೇವೆಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು.
ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!

ಸುಮಾರು ಒಂದು ದಶಕದಿಂದ ನ್ಯಾಯಯುತ ವೇತನಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ, ಆದರೆ, ಸರ್ಕಾರ ನಮ್ಮ ಪ್ರತಿಭಟನೆ ಮತ್ತು ಬೇಡಿಕೆಗಳನ್ನು ಇನ್ನೂ ಪರಿಗಣಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ 2024ರ ಫೆಬ್ರುವರಿಯಲ್ಲಿ ನಡೆದ ಪ್ರತಿಭಟನೆಯನ್ನು ಸ್ಮರಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದಿದ್ದೆವು. ನಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂಬ ಭರವಸೆಯೊಂದಿಗೆ ಹಿಂಪಡೆದಿದ್ದೆವು. ಅಂದಿನಿಂದ ಅನೇಕ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ ಆದರೆ, ನಮ್ಮ ಬೇಡಿಕೆಗಳನ್ನು ಈಡೇರಿಸಲಾಗಿಲ್ಲ. ಮಹಿಳಾ ಪರ ಎಂದು ಹೇಳಿಕೊಳ್ಳುವ ರಾಜ್ಯ ಸರಕಾರ ಕಾರ್ಮಿಕರನ್ನು ಹತ್ತಿಕ್ಕಲು ಯತ್ನಿಸಿದ್ದು, ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಾಕಿ ಇರುವ ವೇತನ ಬಿಡುಗಡೆ, ನಿವೃತ್ತಿ ಸೌಲಭ್ಯವನ್ನು 5 ಲಕ್ಷಕ್ಕೆ ಹೆಚ್ಚಿಸುವುದು, ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು, ಇಎಸ್‌ಐ ಮತ್ತು ಪಿಎಫ್ ಒದಗಿಸುವುದು, ಮೊಬೈಲ್ ಆಧಾರಿತ ಕೆಲಸಗಳಿಗೆ ಸ್ಮಾರ್ಟ್‌ಫೋನ್ ಒದಗಿಸುವುದು, ವಾರ್ಷಿಕ ಸಮಗ್ರ ಆರೋಗ್ಯ ತಪಾಸಣೆ ಮತ್ತು ಗಂಭೀರ ಕಾಯಿಲೆಗೆ ಉಚಿತ ಚಿಕಿತ್ಸೆ ಇತರ ಬೇಡಿಕೆಗಳಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com