ಹಸುಗಳ ಕೆಚ್ಚಲು ಕೊಯ್ದ ಘಟನೆ: ಅಮಾಯಕನನ್ನು ಬಂಧಿಸಲಾಗಿದೆ; ನ್ಯಾಯಯುತ ತನಿಖೆಗೆ ಬಿಜೆಪಿ ಆಗ್ರಹ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಬಿಜೆಪಿ, ವಿಪಕ್ಷದ ನಾಯಕರಿಂದ ತನಿಖೆ ಬಗ್ಗೆ ಅನುಮಾನ
ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
Updated on

ಬೆಂಗಳೂರು: ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ನಿರಪರಾಧಿಯಾಗಿದ್ದು, ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಮಂಗಳವಾರ ಒತ್ತಾಯಿಸಿದೆ.

ಬಿಹಾರದ ಚಂಪಾರಣ್ ಮೂಲದ ಶೇಖ್ ನಸ್ರು (30) ಎಂಬಾತನನ್ನು ಭಾನುವಾರ ಹಸುಗಳ ಕೆಚ್ಚಲು ಕತ್ತರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೂ ಮುನ್ನ ಅಪರಾಧಿಗಳನ್ನು ಬಂಧಿಸದಿದ್ದರೆ ‘ಕಪ್ಪು ಸಂಕ್ರಾಂತಿ’ ಆಚರಿಸುವುದಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅಮಾಯಕನೊಬ್ಬನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಮತ್ತು ಆತನನ್ನೇ ಆರೋಪಿ ಎಂದು ಬಿಂಬಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ ಎಂದರು.

ವಿಪಕ್ಷದ ನಾಯಕ ಆರ್ ಅಶೋಕ ಕೂಡ ತನಿಖೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದರು. ಮಾನಸಿಕವಾಗಿ ಅಸ್ಥಿರವಾಗಿರುವ ವ್ಯಕ್ತಿಯು ಒಂದು ದಶಕದಿಂದ ಸಂಸ್ಥೆಯೊಂದರಲ್ಲಿ ಹೇಗೆ ಕೆಲಸ ಮಾಡಬಹುದು ಎಂದು ಪ್ರಶ್ನಿಸಿದ್ದಾರೆ.

ನಾಲ್ಕು ಎಕರೆ ವಿಸ್ತೀರ್ಣದಲ್ಲಿರುವ ಪಶುವೈದ್ಯಕೀಯ ಆಸ್ಪತ್ರೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಆಸ್ಪತ್ರೆಯನ್ನು ಇತ್ತೀಚೆಗೆ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ ಮತ್ತು ಹಸುಗಳ ಮಾಲೀಕ ಕರ್ಣ ಅವರು ವಕ್ಫ್ ಮಂಡಳಿಯ ಈ ನಿರ್ಧಾರವನ್ನು ವಿರೋಧಿಸಿದ್ದರು. ಈ ವಿರೋಧವೇ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಿದರು.

ವಿಜಯೇಂದ್ರ, ಅಶೋಕ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಸುಗಳ ಕೆಚ್ಚಲು ಕತ್ತರಿಸಿದ ಸ್ಥಳಕ್ಕೆ ತೆರಳಿದರು ಮತ್ತು ಅಲ್ಲಿಯೇ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿ ‘ಸಂಕ್ರಾಂತಿ’ ಹಬ್ಬವನ್ನು ಆಚರಿಸಿದರು.

ಬಿವೈ ವಿಜಯೇಂದ್ರ
ನಿಜವಾದ ಅಪರಾಧಿಗಳನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರದ ಪ್ರಯತ್ನ: ಭಾಸ್ಕರ್ ರಾವ್

ಆರೋಪ ನಿರಾಕರಿಸಿದ ಪರಮೇಶ್ವರ

ಈಮಧ್ಯೆ, ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ್ದಾರೆ ಮತ್ತು ಪೊಲೀಸರು ಯಾವುದೇ ಪಕ್ಷಪಾತವಿಲ್ಲದೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

'ತನಿಖೆಯಲ್ಲಿ ಹೆಚ್ಚಿನ ಜನರು ಭಾಗಿಯಾಗಿರುವುದು ಬಹಿರಂಗವಾದರೆ, ಪೊಲೀಸರು ಅವರನ್ನು ಬಿಡುವುದಿಲ್ಲ' ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com