
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾಯ್ದೆ ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರಿಗೆ ರಾಜ್ಯ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಜನವರಿ 26 ರಂದು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಮುಂದಾಗಿದೆ.
ಪಂಜಾಬ್ನ ಖಾನೌರಿ ಗಡಿಯಲ್ಲಿ ಕಳೆದ 52 ದಿನಗಳಿಂದ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಾಂತಕುಮಾರ್ ಅವರು, 111 ರೈತರು ಖಾನೌರಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ನಾವೂ ಕೂಡ ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದೇವೆ. ದಲ್ಲೆವಾಲ್ ಜೊತೆಗೆ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಹೇಳಿದ್ದಾರೆ.
2014ರಲ್ಲಿ ಪ್ರಧಾನಿ ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ ರೈತರ ಹೋರಾಟ, ಎಂಎಸ್ಪಿ, ಸ್ವಾಮಿನಾಥನ್ ವರದಿ ಮತ್ತಿತರ ವಿಷಯಗಳ ಬಗ್ಗೆ ಮಾತನಾಡಿದ್ದರು. ಈಗ ಅವರು ತಮ್ಮ ಮಾತನ್ನು ಮರೆತಿದ್ದಾರೆ. ಅವರ ಭರವಸೆಗಳನ್ನು ನೆನಪಿಸಲು ಈ ಆಂದೋಲನ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರವು ರೈತರ ಚಳವಳಿಯ ದಿಕ್ಕು ತಪ್ಪಿಸುವ ಮೂಲಕ ದುರ್ಬಲಗೊಳಿಸಲು ಯತ್ನಿಸುತ್ತಿದೆ. ದೆಹಲಿ ಗಡಿಯಲ್ಲಿನ ರೈತರ ಹೋರಾಟದ ಸಮಸ್ಯೆಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ನವಾಬ್ ಸಿಂಗ್ ಸಮಿತಿಯು ನವೆಂಬರ್ 22 ರಂದು ತನ್ನ ಮಧ್ಯಂತರ ವರದಿಯನ್ನು ನೀಡಿದೆ. ಸಮಿತಿ ವರದಿ ನೀಡಿದ್ದರೂ ಕೇಂದ್ರ ಸರಕಾರ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.
ಈ ನಡವೆ ಬೆಂಗಳೂರಿನಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸುವಂತೆ ಹಾಗೂ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲು ನಿರ್ಣಯ ಅಂಗೀಕಲಿಸಲಾಗಿದೆ ಎಂದು ತಿಳಿದುಬಂದಿದೆ
Advertisement