
ಮಂಗಳೂರು: ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.
ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಇಂದು ಮಧುರೈ ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರು ಆರೋಪಿಗಳನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.
ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಬಂಧಿತ ಪ್ರಮುಖ ಆರೋಪಿಗಳಾಗಿದ್ದು, ಇತರ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 2 ಗೋಣಿಚೀಲದಲ್ಲಿದ್ದ ನಗದು, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಅನುಪಮ್ ಅಗರ್ವಾಲ್ ಅವರು ಮಾಹಿತಿ ನೀಡಿದ್ದಾರೆ.
ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್ ಗೆ ಹಾಡಹಗಲೇ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು.
ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು.
Advertisement