
ಬೆಳಗಾವಿ: ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಘಟನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ವಿಪಕ್ಷದ ವಿರುದ್ಧ ಕಿಡಿಕಾರಿರುವ ಅವರು, ಬಿಜೆಪಿ ಆಡಳಿತದಲ್ಲಿ ಯಾವುದೇ ಅತ್ಯಾಚಾರಗಳು ನಡೆದಿಲ್ಲವೇ ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಕೆಆರ್ ಮಾರುಕಟ್ಟೆಯ ಗೋಡೌನ್ ಸ್ಟ್ರೀಟ್ನಲ್ಲಿ ಭಾನುವಾರ ರಾತ್ರಿ ತಮಿಳುನಾಡು ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.
ಯಲಹಂಕಕ್ಕೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ಸಂತ್ರಸ್ತೆಯ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
'ಈ ಘಟನೆ ಎಸ್ಜೆ ಪಾರ್ಕ್ನಲ್ಲಿ ನಡೆದಿದೆ. ದೂರು ಸುಲಿಗೆ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದೆ. ಇಬ್ಬರನ್ನು ಬಂಧಿಸಲಾಗಿದೆ' ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತದಲ್ಲಿ ಅತ್ಯಾಚಾರಗಳು ನಡೆದಿಲ್ಲವೇ? ಅತ್ಯಾಚಾರಗಳು ನಡೆಯಬಾರದು ಮತ್ತು ಮಹಿಳೆಯರಿಗೆ ರಕ್ಷಣೆ ನೀಡಬೇಕು. ಸಮಾಜ ವಿರೋಧಿಗಳು ಇಂತಹ ಕೆಲಸಗಳನ್ನು ಮಾಡುತ್ತಾರೆ. ನಾವು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ದರೋಡೆ, ಕೊಲೆ, ಅತ್ಯಾಚಾರ, ಸಮಾಜದ ದುರ್ಬಲ ವರ್ಗದವರ ಮೇಲಿನ ದೌರ್ಜನ್ಯದಂತಹ ಅಪರಾಧ ಪ್ರಕರಣಗಳು ರಾಜ್ಯದಲ್ಲಿ ಏಕಾಏಕಿ ಹೆಚ್ಚುತ್ತಿವೆ ಎಂದು ಆರೋಪಿಸಿ ಗೃಹ ಸಚಿವ ಜಿ ಪರಮೇಶ್ವರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಂಗಳವಾರ ಒತ್ತಾಯಿಸಿದೆ.
Advertisement