
ಬೆಳಗಾವಿ: ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಕಾಂಗ್ರೆಸ್ ಸಮಾವೇಶದ ವೇಳೆ ಹೃದಯಾಘಾತದಿಂದ ಮೃತಪಟ್ಟ ಹಾವೇರಿ/ ನದಿಹರಳ್ಳಳ್ಳಿ ಗ್ರಾಮದ ಬಸಪ್ಪ ಪಾಮೇನಳ್ಳಿ ಅವರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬುಧವಾರ ಘೋಷಿಸಿದರು.
ಬೆಳಗಾವಿಯಲ್ಲಿ ಜನವರಿ 21 ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಬಸಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು.
ಬಸಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿ ಕೆ ಶಿವಕುಮಾರ್ ಅವರು, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ತಿಳಿಸಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಜನಸಾಗರ ಹರಿದು ಬಂದಿತ್ತು. ಈ ಸಂದರ್ಭದಲ್ಲಿ ಮಾತನಾಡಿದ್ದ ಡಿಕೆ,ಶಿವಕುಮಾರ್ ಅವರು, ಮಹಾತ್ಮ ಗಾಂಧೀಜಿ ಅವರು ಭಾರತದ ಆತ್ಮ. ಗಾಂಧೀಜಿ ಅವರು ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲ ಆದರೆ, ಅವರ ಆದರ್ಶಗಳು, ಸಿದ್ಧಾಂತಗಳು ಇನ್ನೂ ಕೂಡ ಜೀವಂತವಾಗಿವೆ. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂಬುದು ಭಾರತದ ಶಕ್ತಿ ಮಂತ್ರಗಳು.
ಗಾಂಧಿ ಭಾರತ ಎಂದರೆ ಸ್ವಾಭಿಮಾನದ ಭಾರತ, ಏಕತೆಯ ಭಾರತ, ಸಾಮರಸ್ಯದ ಭಾರತ, ಜಾತ್ಯಾತೀತ ಭಾರತ, ಸರ್ವೋದಯ ಭಾರತ. ವಿಶ್ವಕ್ಕೆ ಶಾಂತಿ ಸಹಬಾಳ್ವೆಯ ಸಂದೇಶ ಕೊಟ್ಟಿದ್ದು ನಮ್ಮ ಮಹಾತ್ಮ ಗಾಂಧೀಜಿಯವರು. ಗಾಂಧೀಜಿಯವರು ಸ್ವಾತಂತ್ರ್ಯ ತಂದುಕೊಟ್ಟರೆ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ದೇಶಕ್ಕೆ ವರದಾನವಾಯಿತು. ಸಂವಿಧಾನವೇ ನಮ್ಮ ತಂದೆ-ತಾಯಿ, ಸಂವಿಧಾನವೇ ನಮ್ಮ ಬಂಧು ಬಳಗ, ಸಂವಿಧಾನವೇ ನಮ್ಮ ಗ್ರಂಥ. ಜೈ ಭೀಮ್ ಮೂಲಕ ನಮ್ಮ ನಡುವೆ ಜೀವಂತವಾಗಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು.
ಸತ್ಯದ ಹಾದಿಯಲ್ಲಿ ನಡೆದ ಮಹಾತ್ಮನ ವಿರುದ್ಧವೇ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಗಾಂಧೀಜಿಯವರ ಚಿಂತನೆ ಉಳಿಯಬೇಕಾಗಿದೆ. ಗೋಡ್ಸೆ ಚಿಂತನೆಯನ್ನು ನಾವೆಲ್ಲಾ ಸೇರಿ ನಾಶ ಮಾಡಬೇಕಿದೆ. ಗಾಂಧೀಜಿಯವರ ತತ್ವಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ ಎಂದು ತಿಳಿಸಿದೆ. ಅಲ್ಲದೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ದೇಶದ ಮೂಲೆ ಮೂಲೆಯಲ್ಲೂ ನಡೆಸಬೇಕೆಂದು ಮನವಿ ಮಾಡಿದರು.
Advertisement