
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸಿನಲ್ಲಿ ಬಿಜೆಪಿ ಎಂಎಲ್ಸಿ ಮಾಜಿ ಸಚಿವ ಸಿಟಿ ರವಿಗೆ ಮೊದಲ ಜಯ ಸಿಕ್ಕಿದೆ. ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕೊನೆಯ ದಿನ ಪ್ರತಿಭಟನೆ ವೇಳೆ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವಾಗ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ ಟಿ ರವಿ ಅವಾಚ್ಯ ಶಬ್ದಗಳನ್ನು ಬಳಸಿದ್ದರು ಎಂಬುದು ಆರೋಪವಾಗಿದೆ. ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.
ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.
ಸಿ ಟಿ ರವಿ ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಈ ವಿಚಾರದ ಬಗ್ಗೆಯೂ ಹೈಕೋರ್ಟ್ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
Advertisement