
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ದಾಖಲಿಸಿದೆ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದೇಶದ ಮೊದಲ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಯತ್ನಾಳ್ ಮಾತನಾಡಿದ್ದಾರೆ.
ಮಹಾತ್ಮ ಗಾಂಧಿಯವರ ಹತ್ಯೆಗೆ ಮಾಜಿ ಪ್ರಧಾನಿ ನೆಹರೂ ಕಾರಣ ಎಂದು ಅಪಪ್ರಚಾರದ ಮತ್ತು ಸುಳ್ಳು ಹೇಳಿಕೆ ನೀಡಿ ನೆಹರು ಅವರ ವ್ಯಕ್ತಿತ್ವಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡಿದ್ದಾರೆ. ಪ್ರತೀ ಬಾರಿಯೂ ಅವರು ರಾಜ್ಯದ ಜನತೆಗೆ ತಪ್ಪು ಸಂದೇಶಗಳನ್ನು ರವಾನಿಸಿ ಸುಳ್ಳು ಪ್ರಚಾರ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸುತ್ತಿದ್ದಾರೆ.
ಇತ್ತೀಚೆಗೆ ಮಹಾತ್ಮ ಗಾಂಧಿಯವರನ್ನು ಕೊಂದಿದ್ದು ಗೋಡ್ಸೆ ಎಂಬ ವಿಷಯದ ಕುರಿತು ಹೇಳಿಕೆ ನೀಡಿರುವ ಯತ್ನಾಳ್, ಗಾಂಧಿಯ ದೇಹದಲ್ಲಿ ಒಂದು ಗುಂಡು ಗೋಡ್ಸೆ ಹೊಡೆದಿದ್ದು ಎಂದು ಸಾಬೀತಾಗಿದೆ. ಇನ್ನೆರಡು ಗೋಲಿಯನ್ನು (ಗುಂಡುಗಳನ್ನು) ನೆಹರೂ ಹೊಡೆಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇದು ಅಕ್ಷಮ್ಯ ಎಂದು ಕಾಂಗ್ರೆಸ್ ದೂರಿದೆ.
ನೆಹರೂ ಸರ್ವಾಧಿಕಾರಿ ಆಗಬೇಕೆಂದು ಮಹಾತ್ಮ ಗಾಂಧಿಯವರನ್ನು ಕೊಲ್ಲಿಸಿದರು ಎಂದು ಹೇಳಿರುವ ಯತ್ನಾಳ್ ಅವರ ಆಧಾರಹಿತ ಹೇಳಿಕೆ ದೇಶದ ಹಾಗೂ ರಾಜ್ಯದ ಜನರಲ್ಲಿ ತಪ್ಪು ಕಲ್ಪನೆ ಉಂಟಾಗುತ್ತಿದೆ. ಆದ್ದರಿಂದ ದೇಶಕ್ಕಾಗಿ ಹೋರಾಡಿ ಜೈಲುವಾಸ ಅನುಭವಿಸಿದ್ದ ಮಾಜಿ ಪ್ರಧಾನಿ ನೆಹರೂ ಬಗ್ಗೆ ಅಪಪ್ರಚಾರ ಮಾಡಿರುವ ಹಾಗೂ ಮಹಾತ್ಮ ಗಾಂಧಿಯವರ ಸಾವಿನ ಬಗ್ಗೆ ಸುಳ್ಳು ಅಪಪ್ರಚಾರ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
Advertisement