
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ಏಕ ಸದಸ್ಯ ಪೀಠ ಸೋಮವಾರ ತಡೆ ನೀಡಿದೆ.
ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಅವರು ಇಡಿ ಸಮನ್ಸ್ ಪ್ರಶ್ನಿಸಿ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್ಗೆ ತಡೆ ನೀಡಿದ್ದಾರೆ.
ಈ ಎರಡೂ ಸಮನ್ಸ್ಗಳಿಗೂ ಮಧ್ಯಂತರ ತಡೆ ನೀಡಿರುವ ಹೈಕೋರ್ಟ್, ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.
ಪಾರ್ವತಿ ಮತ್ತು ಬೈರತಿ ಸುರೇಶ್ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಸಿ.ವಿ. ನಾಗೇಶ್, ಸಂದೇಶ್ ಚೌಟ ಮತ್ತು ವಿಕ್ರಮ್ ಹುಯಿಲುಗೋಳ್ ಅವರು, ಇದೇ ರೀತಿಯ ಸಂದರ್ಭಗಳಲ್ಲಿ ಮುಡಾ ಅಧಿಕಾರಿ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ನ ಸಮನ್ವಯ ಪೀಠ ರದ್ದುಗೊಳಿಸಿದೆ ಎಂದು ವಾದಿಸಿದರು. ಅಲ್ಲದೆ, ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿರುವ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ ಎಂದು ಹೇಳಿದರು.
ಸಮನ್ಸ್ಗೆ ತಡೆ ನೀಡುವಂತೆ ಅರ್ಜಿದಾರರ ಪರ ವಕೀಲರು ಮಾಡಿದ ಮನವಿಯನ್ನು ವಿರೋಧಿಸಿದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, ತನಿಖಾ ಸಂಸ್ಥೆಯು ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ಯಾವುದೇ ಅಡೆತಡೆ ಇಲ್ಲ ಎಂದು ವಾದಿಸಿದರು.
ವಾದ, ಪ್ರತಿವಾದ ಆಲಿಸಿದ ಕೋರ್ಟ್, ಮುಂದಿನ ವಿಚಾರಣೆ ದಿನಾಂಕವಾದ ಫೆಬ್ರವರಿ 10 ರವರೆಗೆ ಜಾರಿ ಮಾಡಲಾದ ಇಡಿ ಸಮನ್ಸ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಮಧ್ಯೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ ಹೈಕೋರ್ಟ್ ಪೀಠಕ್ಕೆ ಸಲ್ಲಿಸಲಿದ್ದಾರೆ.
Advertisement