ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ

ಮುಡಾ ಹಗರಣದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠ ಕೈಗೆತ್ತಿಕೊಂಡಿತು.
High Court, cm Siddaramaiah
ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಸೋಮವಾರ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂಬರ್ ಒನ್ ಆರೋಪಿಯಾಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ.

ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದ್ದೇಶ್, ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಸಂಬಂಧ ತಪ್ಪದೇ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ನ್ಯಾಯಾಲಯ ಈ ಹಿಂದೆ ಸೂಚಿಸಿತ್ತು.

ಬಳಿಕ ಮುಡಾ ಹಗರಣದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯ ಪೀಠ ಕೈಗೆತ್ತಿಕೊಂಡಿತು.

ದೂರುದಾರರ ವಿರುದ್ಧ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ನ್ಯಾಯ ಪೀಠದ ಮುಂದೆ ಮನವಿ ಮಾಡಿದರು. ರಜೆಯ ನಂತರ ಬೆಂಗಳೂರಿನಲ್ಲಿ ನ್ಯಾಯಾಲಯವು ಮತ್ತೆ ಕಾರ್ಯನಿರ್ವಹಿಸಿದಾಗ ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಳ್ಳಬಹುದು ಎಂದರು. ಆದರೆ ಇದಕ್ಕೆ ಒಪ್ಪದ ನ್ಯಾಯಪೀಠ, ವಿಳಂಬ ಮಾಡದೆ ವಾದ ಮಂಡಿಸುವಂತೆ ಎಜಿಗೆ ಸೂಚಿಸಿತು.

ವಕೀಲ ಕಪಿಲ್ ಸಿಬಲ್ ಅವರು ನ್ಯಾಯಾಲಯಕ್ಕೆ ಹಾಜರಾಗಲು ಕಾಲಾವಕಾಶ ಕೋರಿದ್ದು, ಸಮಾಯವಕಾಶದ ಅಗತ್ಯವಿದೆ ಎಂದು ಶಶಿ ಕಿರಣ್ ಶೆಟ್ಟಿ ಹೇಳಿದಾಗ ವಿಡಿಯೋ ಕಾನ್ಫರೆನ್ಸ್ ಮೂಲಕ ವಾದ ಮಂಡಿಸಬಹುದು ಎಂದು ಪೀಠ ಹೇಳಿತು. ವೀಡಿಯೊ ಕಾನ್ಫರೆನ್ಸಿಂಗ್‌ನಲ್ಲಿ ತಾಂತ್ರಿಕ ದೋಷವಿದೆ ಎಂದು ಎಜೆ ಹೇಳಿದ ನಂತರ ಇಂದೇ ವಾದ ಮಂಡಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿತು.

ಪ್ರಕರಣದ ನಾಲ್ಕನೇ ಆರೋಪಿ ಭೂಮಾಲೀಕ ಜೆ.ದೇವರಾಜು ಪರ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ, ತಮ್ಮ ಕಕ್ಷಿದಾರರು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿಲ್ಲ, ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಯ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಅರ್ಜಿ ಸಲ್ಲಿಸಲಾಗಿದೆ ಎಂದು ದೂರಿದರು.

High Court, cm Siddaramaiah
ಮುಡಾ ಪ್ರಕರಣ: ಲೋಕಾಯುಕ್ತಕ್ಕೆ E.D ಪತ್ರ ರಾಜಕೀಯ ಪ್ರೇರಿತ- Siddaramaiah

ಇದಕ್ಕೂ ಮುನ್ನ ವಾದ ಮಂಡಿಸಿದ ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್, ಪ್ರಕರಣದಲ್ಲಿ ಆರೋಪಿಗಳ ನಂಟಿನ ಕುರಿತು ಎಲ್ಲಾ ದಾಖಲೆಗಳು ಮತ್ತು ಪುರಾವೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ್ದೇನೆ. ಲೋಕಾಯುಕ್ತರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿಲ್ಲ. ಹಾಗಾಗೀ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿದರು. ಅಂತಿಮವಾಗಿ ಎರಡೂ ಕಡೆ ವಾದ, ವಿವಾದ ಆಲಿಸಿದ ನ್ಯಾಯಪೀಠ ಆದೇಶವನ್ನು ಕಾಯ್ದಿರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com