
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಬಿಗ್ ರಿಲೀಫ್ ನೀಡಿದೆ.
ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿ, ದಾಖಲು ಮಾಡಿಕೊಂಡಿರುವ ತಮ್ಮ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ನಟೇಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ನಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ, ಜನವರಿ 16 ರಂದು ಆದೇಶ ಕಾಯ್ದಿರಿಸಿದ್ದರು. ಇಂದು ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ಒಳಗೊಂಡ ಮುಡಾ ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸಲು ಯತ್ನಿಸುತ್ತಿದೆ. ಆದರೆ ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಎರಡನೆಯದಾಗಿ ಜಾರಿ ನಿರ್ದೇಶನಾಲಯ ನಿರ್ದೇಶಕರು ಅಥವಾ ಅವರು ಸೂಚಿಸುವ ಅಧಿಕಾರಿಗಳು ಇದು ಶೋಧ ಮತ್ತು ಜಫ್ತಿ ನಡೆಸಲು ಸೂಕ್ತ ಪ್ರಕರಣ ಎಂದು ಹೇಳಬೇಕು. ಹಾಲಿ ಪ್ರಕರಣದಲ್ಲಿ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರಿಗೆ ತನಿಖೆಗೆ ಅನುಮತಿಸಿದ್ದಾರೆ. ಇದಕ್ಕೆ ಹಣ ಅಕ್ರಮ ವರ್ಗಾವಣೆ ಕಾಯಿದೆ ಸೆಕ್ಷನ್ 17(1)ರಲ್ಲಿ ಅವಕಾಶವಿಲ್ಲ. ಈ ನೆಲೆಯಲ್ಲಿ ಇಡೀ ಶೋಧ ಮತ್ತು ಜಫ್ತಿ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು.
Advertisement