ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದಿದ್ದ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಲಿ; ಪ್ರಲ್ಹಾದ ಜೋಶಿ

ಆಧಾರ ರಹಿತ ಆರೋಪ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಯವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಹೇಳಿದೆ.
Union Minister Pralhad Joshi
ಪ್ರಲ್ಹಾದ ಜೋಶಿ
Updated on

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕು ಎಂದು ಎಂದು ಬಿಜೆಪಿ ಭಾನುವಾರ ಒತ್ತಾಯಿಸಿದೆ.

ಹಠಾತ್ ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯ ಅಧ್ಯಯನ ತಿಳಿಸಿದೆ.

ಆಧಾರ ರಹಿತ ಆರೋಪ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಯವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಹೇಳಿದೆ.

ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬೇಜವಾಬ್ದಾರಿ ಎಂದು ಕರೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ) ಮತ್ತು ಏಮ್ಸ್-ದೆಹಲಿ ಸೇರಿದಂತೆ ಪ್ರಮುಖ ರಾಷ್ಟ್ರೀಯ ಸಂಸ್ಥೆಗಳು ಕೋವಿಡ್-19 ಲಸಿಕೆಗಳಿಗೂ ಹೃದಯಾಘಾತಕ್ಕೂ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಸ್ಪಷ್ಟಪಡಿಸಿವೆ ಎಂದರು.

ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಲಸಿಕೆ ಅಭಿವೃದ್ಧಿಪಡಿಸಲಾಗಿದೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯ ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಜೋಶಿ ಹುಬ್ಬಳ್ಳಿಯಲ್ಲಿ ಹೇಳಿದರು.

Union Minister Pralhad Joshi
ಸರಣಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ತಜ್ಞರ ಸಮಿತಿಯಿಂದ ವರದಿ ಸಲ್ಲಿಕೆ

ಸಾಂಕ್ರಾಮಿಕ ರೋಗವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜಕೀಯವಾಗಿ ಹಾನಿ ಮಾಡುತ್ತದೆ ಎಂದು ಅವರು ಭಾವಿಸಿದ್ದರು. ಆದರೆ, ಪ್ರಧಾನಿ ಮೋದಿಯವರು ಕೋವಿಡ್ ಅನ್ನು ಸೂಕ್ಷ್ಮತೆ ಮತ್ತು ಕಾಳಜಿಯಿಂದ ನಿಭಾಯಿಸಿದರು. ಕೋವಿಡ್ ಅನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಕ್ಕೆ ಪ್ರಧಾನಿ ವ್ಯಾಪಕ ಮನ್ನಣೆ ಪಡೆದಿರುವುದರಿಂದ, ವಿರೋಧ ಪಕ್ಷಗಳು ಆಧಾರರಹಿತ ಆರೋಪಗಳನ್ನು ಆಶ್ರಯಿಸುತ್ತಿವೆ ಎಂದು ಹೇಳಿದರು.

ಜಯದೇವ ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದ ಸಮಿತಿಯನ್ನು ಸಿದ್ದರಾಮಯ್ಯ ಅವರೇ ಕೋವಿಡ್ ಲಸಿಕೆ ಮತ್ತು ಹೃದಯ ಸಂಬಂಧಿ ಸಾವುಗಳ ನಡುವಿನ ಯಾವುದೇ ಸಂಭವನೀಯ ಸಂಬಂಧವನ್ನು ಪರಿಶೀಲಿಸಲು ರಚಿಸಿದ್ದಾರೆ. ಕೋವಿಡ್ ಲಸಿಕೆಗಳು ಹೃದಯಾಘಾತಕ್ಕೆ ಕಾರಣವಲ್ಲ ಎಂದು ಸಮಿತಿಯು ಸ್ಪಷ್ಟವಾಗಿ ಹೇಳಿದೆ. ಸಿದ್ದರಾಮಯ್ಯ ಈಗ ಕ್ಷಮೆ ಕೇಳುತ್ತಾರಾ? ಅವರ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಜೋಶಿ ಹೇಳಿದರು.

ಬಿಜೆಪಿ ವಕ್ತಾರ ಡಾ. ಸಿಎನ್ ಅಶ್ವತ್ಥ ನಾರಾಯಣ್ ಕೂಡ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದು, ಅವರ ಹೇಳಿಕೆಯು ಭಾರತೀಯ ನಿರ್ಮಿತ ಲಸಿಕೆಗಳನ್ನು ಅಪಖ್ಯಾತಿ ಮಾಡುವ ಮತ್ತು ಪ್ರಧಾನಿಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದರು.

ಯಾವುದೇ ವೈಜ್ಞಾನಿಕ ಆಧಾರವಿಲ್ಲದೆ ಲಕ್ಷಾಂತರ ಮಂದಿಯ ಜೀವಗಳನ್ನು ಉಳಿಸಿದ ಲಸಿಕೆಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಮುಖ್ಯಮಂತ್ರಿಗಳು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com