
ಬೆಂಗಳೂರು: ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳಿಗೆ ಸೂಕ್ತ ಪರಿಹಾರಗಳನ್ನು ಒದಗಿಸಲು, ಕಾರ್ಯತಂತ್ರವನ್ನು ರೂಪಿಸಲು ರಚಿಸಲಾದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದು, ಮಂಡಳಿಯ ಮೊದಲ ಸಭೆ ಜುಲೈ 15 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಆವರಣದಲ್ಲಿ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಇತ್ತೀಚೆಗೆ ಅನುಮೋದನೆ ನೀಡಿದ್ದು, ಮಂಡಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಇದ್ದಾರೆ. ಮಂಡಳಿಯಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಒಟ್ಟು 24 ಸದಸ್ಯರಿದ್ದಾರೆ.
ಕೆಪಿಸಿಸಿ ಕಚೇರಿಯ ಆವರಣದಲ್ಲಿರುವ ಭಾರತ್ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ಇದೇ 15ರಂದು ನಡೆಯಲಿದೆ.
ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಈ ಸಭೆಯ ಆಹ್ವಾನ ನೀಡಲಾಗಿದೆ. ಐವರು ಮಾಜಿ ಮುಖ್ಯಮಂತ್ರಿಗಳು, ಹತ್ತು ಮಂದಿ ಕೇಂದ್ರದ ಮಾಜಿ ಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
ಮುಂದಿನ ಕಾರ್ಯಯೋಜನೆಗಳು, ಅವುಗಳ ಅನುಷ್ಠಾನ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಕುರಿತು ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಈ ಸಲಹಾ ಮಂಡಳಿಯು ಸಲಹೆಗಳನ್ನು ನೀಡಲಿದೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಬಳಸಿಕೊಂಡು ದೇಶದಾದ್ಯಂತ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಎಐಸಿಸಿ ಈ ಮಂಡಳಿ ರಚಿಸಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಮಂಡಳಿ ಸಲಹೆಗಳನ್ನು ನೀಡಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಡಳಿಯಲ್ಲಿ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್, ವಿ ನಾರಾಯಣಸ್ವಾಮಿ, ಸಚಿನ್ ಪೈಲಟ್, ಗುರುದೀಪ್ ಸಿಂಗ್ ಸಪ್ಪಲ್, ಅರುಣ್ ಯಾದವ್, ವಿಜಯ್ ನಾಮದೇವರಾವ್ ವಡೆತ್ತಿವಾರ್, ವಿ ಹನುಮಂತ ರಾವ್, ಅಮಿತ್ ಚಾವ್ಡಾ, ಮಹೇಶ್ ಕುಮಾರ್ ಗೌಡ್, ಪೊನ್ನಂ ಪ್ರಭಾಕರ್, ಎಸ್ ಜೋತಿಮಣಿ, ಶ್ರೀಕಾಂತ್ ಜೆನ, ಕಮಲೇಶ್ವರ್ ಪಟೇಲ್, ಅಜಯ್ ಕುಮಾರ್ ಲುಲ್ಲು, ಸುಭಾಷಿಣಿ ಯಾದವ್, ಅದೂರ್ ಪ್ರಕಾಶ್ ಧಾನೇಂದ್ರ ಸಾಹು, ಹೀನಾ ಕಾವ್ರೆ, ಡಾ.ಅನಿಲ್ ಜೈಹಿಂದ್ ಇದ್ದಾರೆ. ಸಲಹಾ ಮಂಡಳಿಯ ಸಂಚಾಲಕಪಾಗಿ ಡಾ ಅನಿಲ್ ಜೈಹಿಂದ್ ಮತ್ತು ಕಾರ್ಯದರ್ಶಿಯಾಗಿ ಜಿತೇಂದರ್ ಬಾಘೇಲ್ ಇದ್ದಾರೆ.
Advertisement