
ನವದೆಹಲಿ: ರೈತರೊಬ್ಬರ ಆತ್ಮಹತ್ಯೆ ಕುರಿತು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರಿದ್ದ ಪೀಠವು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
'ಇದೇನಿದು? ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಇಂತಹ ರಾಜಕೀಯ ಹೋರಾಟಗಳನ್ನು ನೀವು ನ್ಯಾಯಾಲಯದಿಂದ ಹೊರಗಿಟ್ಟುಕೊಳ್ಳಿ' ಎಂದು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಸೂಚಿಸಿದರು.
ಬಿಜೆಪಿ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು, 2024ರ ನವೆಂಬರ್ 7ರಂದು ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿ ಜಿಲ್ಲೆಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು. ರೈತನ ಆತ್ಮಹತ್ಯೆ ಬಗ್ಗೆ ತೇಜಸ್ವಿ ಸೂರ್ಯ ಅವರು ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಂತಹ ಯಾವುದೇ ಪ್ರಕರಣ ನಡೆದಿಲ್ಲ ಎಂದು ಎಸ್ಪಿ ಸ್ಪಷ್ಟನೆ ನೀಡಿದ ಬಳಿಕ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದರು.
ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿದ ಪೀಠವು, ಕಾನೂನು ಪ್ರಕ್ರಿಯೆಗಳನ್ನು ರಾಜಕೀಯಗೊಳಿಸುವುದರ ವಿರುದ್ಧ ಎಚ್ಚರಿಕೆ ನೀಡಿತು.
ಸುಳ್ಳು ಸುದ್ದಿ ಹರಡಿದ್ದಕ್ಕಾಗಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
Advertisement