
ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು DNA ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಕಂಪನಿಗಳಿಗೆ ಸಂಕಷ್ಟ ಎದುರಾಗಿದೆ.
ಆರ್ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಸಂಪುಟ ನಿರ್ಧರಿಸಿದೆ. ಜೊತೆಗೆ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸಲಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ಅವರ ವರದಿಯನ್ನು ಅಂಗೀಕರಿಸಲಾಗಿದ್ದು ಅದರ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ಪಾಟೀಲ್ ಹೇಳಿದರು.
ಕಾಲ್ತುಳಿತ ಮತ್ತು ನಿರ್ಲಕ್ಷ್ಯಕ್ಕೆ ಯಾರು ಕಾರಣರೆಂದು ನ್ಯಾಯಮೂರ್ತಿ ಡಿ'ಕುನ್ಹಾ ವರದಿಯಲ್ಲಿ ಸೂಚಿಸಲಾಗಿದೆ ಎಂದರು. ಇನ್ನು ದುರಂತ ನಡೆದ ಒಂದು ದಿನದ ನಂತರ, ಜೂನ್ 5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ತನಿಖೆಗೆ ಆದೇಶಿಸಿದರು. ಕಾಲ್ತುಳಿತದ ನಂತರ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಹೆಚ್ಚುವರಿ ಆಯುಕ್ತ (ಪಶ್ಚಿಮ) ವಿಕಾಶ್ ಕುಮಾರ್ ವಿಕಾಶ್ ಅವರನ್ನು ಅಮಾನತು ಮಾಡಲಾಗಿತ್ತು.
ಐಪಿಎಲ್ನಲ್ಲಿ ಆರ್ಸಿಬಿ ಚೊಚ್ಚಲ ಕಪ್ ಗೆದ್ದ ನಂತರ ಫ್ರಾಂಚೈಸಿ ಆಯೋಜಿಸಿದ್ದ ವಿಜಯೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಈ ಕಾಲ್ತುಳಿತ ಸಂಭವಿಸಿತ್ತು. ಕ್ರೀಡಾಂಗಣದ ಹೊರಗೆ ಭಾರಿ ಜನಸಮೂಹ ಜಮಾಯಿಸಿದ್ದರಿಂದ ತಳ್ಳಾಟ ನೂಕಾಟ ಸಂಭವಿಸಿ ಕಾಲ್ತುಳಿತ ಉಂಟಾಯಿತು.
Advertisement