
ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಅಭಾವ ಸೃಷ್ಟಿ ಆಗಿದೆ. ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಸಿಗದೆ ರೈತರು ಹತಾಶರಾಗಿದ್ದಾರೆ. ಕೊಪ್ಪಳ, ಗದಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ರಸ್ತೆ ತಡೆದು ರೈತರು ಪ್ರತಿಭಟನೆ ಮಾಡಿದ್ದಾರೆ. ಇದೀಗ ಈ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಕೇಂದ್ರ ರಸಗೊಬ್ಬರ ಇಲಾಖೆ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.
ಸಿಎಂ ಬರೆದ ಪತ್ರದಲ್ಲಿ ಏನಿದೆ?
ಕೇಂದ್ರ ಸರ್ಕಾರವು 2025ರ ಖಾರಿಫ್ ಬೆಳೆಗೆ ರಾಜ್ಯಕ್ಕೆ 11,17,000 ಮೆಟ್ರಿಕ್ ಟನ್ ಯೂರಿಯಾ ಹಂಚಿಕೆ ಮಾಡಿದೆ. ಈವರೆಗೆ ಕೇವಲ 5,16,959 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಮಾಡಲಾಗಿದೆ. ಏಪ್ರಿಲ್ ತಿಂಗಳಿನಿಂದ ಜುಲೈವರೆಗೆ ರಾಜ್ಯಕ್ಕೆ 6,80,655 ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆ ಇದೆ. ಕೆಲ ರಸಗೊಬ್ಬರ ಕಂಪನಿಗಳು ಕೇಂದ್ರವು ಮಾಡಿದ ಹಂಚಿಕೆಯ ಪ್ರಕಾರ ಯೂರಿಯಾ ಗೊಬ್ಬರ ಪೂರೈಸಲು ಅಸಮರ್ಥತೆಯನ್ನು ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಯೂರಿಯಾ ಪೂರೈಕೆಯ ತುರ್ತು ಅವಶ್ಯಕತೆಯಿದೆ. ರಾಜ್ಯದ ಈ ವರ್ಷದ ಆರಂಭದಲ್ಲಿಯೇ ಮಳೆ ಸುರಿದಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿವಿಧ ಬೆಳೆಗಳ ವ್ಯಾಪ್ತಿಯು ಹೆಚ್ಚಾಗಿದೆ. ತುಂಗಭದ್ರಾ, ಕಾವೇರಿ ಮತ್ತು ಕೃಷ್ಣಾ ನದಿಗಳ ಆಯಕಟ್ಟಿನ ಪ್ರದೇಶಗಳಲ್ಲಿ ನೀರನ್ನು ಮೊದಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂಗಾರು ಆರಂಭಿಕ ಬಿತ್ತನೆ ಚಟುವಟಿಕೆ ಆರಂಭವಾಗಿದೆ. ಹೆಚ್ಚಿನ ಗೊಬ್ಬರ ಬಳಸುವ ಬೆಳೆಯಾದ ಮೆಕ್ಕೆಜೋಳದ ವಿಸ್ತೀರ್ಣವು ಸುಮಾರು 2 ಲಕ್ಷ ಹೆಕ್ಟೇರ್ಗಳಷ್ಟು ಹೆಚ್ಚಾಗಿದೆ. ದ್ವಿದಳ ಧಾನ್ಯಗಳ ವಿಸ್ತೀರ್ಣವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆ ಆಗಿದೆ ಎಂದಿದ್ದಾರೆ.
13,000 ಹೆಕ್ಟೇರ್ ಖಾರಿಫ್ ಪೂರ್ವ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಯೂರಿಯಾ ಕೊರತೆಯು ರೈತರಲ್ಲಿ ಅಶಾಂತಿ ಆತಂಕವನ್ನು ಸೃಷ್ಟಿಸುತ್ತಿದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಹಂಚಿಕೆ ಪ್ರಕಾರ ರಸಗೊಬ್ಬರ ಪೂರೈಸಿ. ಬಾಕಿ ಕೊರತೆ ಇರುವ ಯೂರಿಯಾದ ಪೂರೈಕೆಯನ್ನು ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
Advertisement