ಬಿಹಾರ ಮಹಿಳೆ ದರ್ಪ ಖಂಡಿಸಿ ಆಟೋ ಚಾಲಕರ ಖಂಡನೆ: ರಕ್ಷಣೆಗೆ ಕಾನೂನು ರೂಪಿಸುವಂತೆ ಆಗ್ರಹ
ಬೆಂಗಳೂರು: ಆಟೋ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಬಿಹಾರಿ ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಆಟೋ ಚಾಲಕರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸಿಐಟಿಯು ನೇತೃತ್ವದಲ್ಲಿ ಆಟೋ ರಿಕ್ಷಾ ಡ್ರೈವರ್ಸ್ ಯುನಿಯನ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ನೂರಾರು ಚಾಲಕರು ಭಾಗವಹಿಸಿದ್ದರು.
ಇತ್ತೀಚೆಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ಘಟನೆಗಳು ಹೆಚ್ಚುತ್ತಿವೆ. ಹೀಗಾಗಿ, ಚಾಲಕರಿಗೆ ಸೂಕ್ತ ರಕ್ಷಣೆ ನೀಡಬೇಕು. ಸರ್ಕಾರಿ ನೌಕರರಿಗೆ ರಕ್ಷಣೆ ಇರುವಂತೆ ನಮಗೂ ರಕ್ಷಣೆ ಒದಗಿಸಲು ಕಾನೂನು ಜಾರಿಗೆ ತರಬೇಕು. ಆಟೋ ಚಾಲಕರು ತಪ್ಪು ಮಾಡಿದಾಗ, ಕೂಡಲೇ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಅದೇ ರೀತಿ ಪ್ರಯಾಣಿಕರು, ಸಾರ್ವಜನಿಕರಿಂದ ಆಟೋ ಚಾಲಕರ ಮೇಲೆ ಹಲ್ಲೆಯಾದಾಗ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ. ಮಂಜುನಾಥ್, ನಗರದಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸುರಕ್ಷತೆ ಇಲ್ಲ. ಅವರು ಶಾಂತಿಯುತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಪೊಲೀಸರು ಆಟೋ ಚಾಲಕರನ್ನು ಬೆಂಬಲಿಸುವುದಿಲ್ಲ. ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಕ್ಷಣೆ ಕೋರಿ ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲೇ ಮನವಿ ಪತ್ರ ಸಲ್ಲಿಸಲಾಗುವುದು. ನಮ್ಮ ಮೇಲೆ ಹಲ್ಲೆ ನಡೆಸಿದರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.