
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ವೇಳೆ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಮುಚ್ಚಿದ ಲಕೋಟೆಯಲ್ಲಿ ಉತ್ತರ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ನ್ಯಾಯಾಲಯ ಆದೇಶಿಸಿದೆ.
ವಿಚಾರಣೆ ವೇಳೆ, ಅಡ್ವೊಕೇಟ್ ಜನರಲ್ ಶೆಟ್ಟಿ, 'ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ ಸಲ್ಲಿಸಿಲ್ಲ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಅದು ವರದಿ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ವಾದಿಸಿದರು.
ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯೂ ಇಂದೇ ನಡೆಯಲಿದ್ದು, ಸೂಕ್ಷ್ಮ ಮಾಹಿತಿಯನ್ನು ಅರ್ಜಿದಾರರು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಮುಚ್ಚಿದ ಲಕೋಟೆಯಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ಅನುಮತಿ ಕೇಳಿದರು.
ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.
ಇದೇ ವೇಳೆ ಹಿರಿಯ ವಕೀಲ ಕೆ ದಿವಾಕರ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ ಅವರು ಈ ಅರ್ಜಿಯಲ್ಲಿ ಮಧ್ಯಂತರ ಅರ್ಜಿದಾರನಾಗಿ ಸೇರ್ಪಡೆಗೊಳ್ಳಲು ಅನುಮತಿ ಕೋರುತ್ತಿದ್ದಾರೆ' ಎಂದರು.
ಈಮಧ್ಯೆ, ಕಾಲ್ತುಳಿತದ ಕುರಿತು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸುತ್ತಿರುವುದಾಗಿ ವಕೀಲರೊಬ್ಬರು ತಿಳಿಸಿದ್ದಾರೆ.
ಇದೆಲ್ಲವನ್ನು ಆಲಿಸಿದ ನ್ಯಾಯಪೀಠ, ಸರ್ಕಾರ ತನ್ನ ಪ್ರತಿಕ್ರಿಯೆಯನ್ನು ಮುಚ್ಚಿದ ಲಕೋಟೆಯಲ್ಲಿ ಇದೇ 12ರಂದು ನ್ಯಾಯಪೀಠಕ್ಕೆ ಸಲ್ಲಿಸಲಿ. ನಂತರ ಮಧ್ಯಂತರ ಸೇರ್ಪಡೆ ಕುರಿತಾದ ಅರ್ಜಿಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿತು.
Advertisement