ಭಾರತೀಯ ರೈಲ್ವೆ
ಭಾರತೀಯ ರೈಲ್ವೆ

ಕರ್ನಾಟಕ, ಆಂಧ್ರ, ಜಾರ್ಖಂಡ್‌ನಲ್ಲಿ 6,405 ಕೋಟಿ ರೂ ಮೌಲ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
Published on

ನವದೆಹಲಿ: ಆಂಧ್ರಪ್ರದೇಶ, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ರೈಲ್ವೆ ಹಳಿಗಳ ಡಬಲಿಂಗ್ ಗಾಗಿ 6,405 ಕೋಟಿ ರೂ.ಗಳ ಎರಡು ಪ್ರಮುಖ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ರೈಲ್ವೆ ಖಾತೆಯನ್ನೂ ಹೊಂದಿರುವ ವೈಷ್ಣವ್ ಅವರ ಪ್ರಕಾರ, ಈ ಯೋಜನೆಯು ಜಾರ್ಖಂಡ್‌ನ ಪ್ರಮುಖ ಕಲ್ಲಿದ್ದಲು ಉತ್ಪಾದಿಸುವ ಪ್ರದೇಶದ ಮೂಲಕ ಹಾದುಹೋಗುವ ಕೊಡೆರ್ಮಾ-ಬರ್ಕಕಾನ(133 ಕಿಮೀ) ಡಬಲಿಂಗ್ ಯೋಜನೆ ಒಳಗೊಂಡಿದೆ.

ಇದು ಬಿಹಾರದ ರಾಜಧಾನಿ ಪಾಟ್ನಾ ಮತ್ತು ಜಾರ್ಖಂಡ್‌ ರಾಜಧಾನಿ ರಾಂಚಿ ನಡುವೆ ಅತ್ಯಂತ ಪರಿಣಾಮಕಾರಿ ರೈಲು ಸಂಪರ್ಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ರೈಲ್ವೆ
ರೈಲ್ವೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಗಳನ್ನು ಪರಿಹರಿಸಲು ಸಭೆ; ಯೋಜನೆ ಪೂರ್ಣಗೊಳಿಸಲು ಆದ್ಯತೆ

ಇನ್ನು ಕರ್ನಾಟಕದ ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆ ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೂಲಕ ಹಾದುಹೋಗುವ ಬಳ್ಳಾರಿ – ಚಿಕ್ಕಜಾಜೂರ್ ದ್ವಿಮುಖ ಮಾರ್ಗ(185 ಕಿ.ಮೀ.)ಕ್ಕೆ ಅನುಮೋದಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಒಟ್ಟು 6,405 ಕೋಟಿ ರೂ.ಗಳಲ್ಲಿ 318 ಕಿ.ಮೀ. ಉದ್ದದ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಸರಕು ಸಾಗಣೆಯನ್ನು ಹೆಚ್ಚಿಸುವುದು, ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದು ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸುವುದು ಈ ಯೋಜನೆಗಳ ಗುರಿಯಾಗಿದೆ.

ಮುಂದಿನ ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಅವು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡುತ್ತವೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಗಳು ಜಾರ್ಖಂಡ್, ಕರ್ನಾಟಕ ಮತ್ತು ಆಂಧ್ರಪ್ರದೇಶದ 7 ಜಿಲ್ಲೆಗಳನ್ನು ಒಳಗೊಂಡಿರುತ್ತವೆ ಮತ್ತು ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 318 ಕಿ.ಮೀ. ಹೆಚ್ಚಿಸುತ್ತವೆ ಎಂದು ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com