
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ನಮ್ಮ ಸರ್ಕಾರ ಸುಮಾರು 60 ರಿಂದ 70 ದಿನಗಳಲ್ಲಿ ರಾಜ್ಯದಲ್ಲಿ ಹೊಸದಾಗಿ ಜಾತಿ ಗಣತಿ ಕಾರ್ಯವನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಜಾತಿ ಗಣತಿ ಕುರಿತು ಮರು ಸಮೀಕ್ಷೆಗೆ ಸಂಬಂಧಿಸಿದಂತೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.
"2015-16ರಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ(ಜಾತಿ ಗಣತಿ)ಯ ವರದಿಯನ್ನು ಪ್ರಾಥಮಿಕವಾಗಿ ಅಂಗೀಕರಿಸಲಾಗಿದೆ. ಇದನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತಿಲ್ಲ. ಜನಸಂಖ್ಯೆಗೆ ಸಂಬಂಧಪಟ್ಟಂತಹ ಮಾಹಿತಿಯನ್ನು ಮಾತ್ರ ಮರು ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಜಾತಿ ಸಮೀಕ್ಷೆ ನಡೆದು ಸುಮಾರು ಒಂಬತ್ತು-ಹತ್ತು ವರ್ಷಗಳು ಕಳೆದಿರುವುದರಿಂದ ಕೆಲವು ದೂರುಗಳು ಬಂದಿವೆ ಎಂದು ಹೈಕಮಾಂಡ್ ಹೇಳಿದೆ. ಆದ್ದರಿಂದ ಕಡಿಮೆ ಅವಧಿಯಲ್ಲಿ, ಸುಮಾರು 60-70 ದಿನಗಳಲ್ಲಿ ಮರು ಸಮೀಕ್ಷೆ ಮಾಡಲಾಗುತ್ತದೆ. ಹಿಂದುಳಿದ ವರ್ಗಗಳ ಆಯೋಗ ನೀಡಿದ ಸಂಪೂರ್ಣ ವರದಿಯನ್ನು ನಾವು ತಿರಸ್ಕರಿಸುತ್ತಿಲ್ಲ. ಮುಖ್ಯವಾಗಿ ವರದಿಯನ್ನು ಅಂಗೀಕರಿಸಲಾಗಿದೆ, ಮರು ಸಮೀಕ್ಷೆ ಮಾತ್ರ ಮಾಡಲಾಗುತ್ತದೆ" ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಹೈಕಮಾಂಡ್ ಸೂಚನೆಯಿಂದ ಸಿದ್ದರಾಮಯ್ಯನವರಿಗೆ ನಿರಾಶೆಯಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ವರದಿಯ ವಿಚಾರದಲ್ಲಿ ನನ್ನ ನಿರ್ಧಾರ ಮುಖ್ಯ ಅಲ್ಲ. ಹೈಕಮಾಂಡ್ ಹೇಳಿದಂತೆ ಮರು ಸಮೀಕ್ಷೆ ನಡೆಸುತ್ತೇವೆ ಎಂದು ಹೇಳಿದರು.
ಇನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಅಗತ್ಯವಿರುವ ಕಡೆ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ. ಅವರ ಸಂಖ್ಯೆಯನ್ನು ಹೆಚ್ಚಿಸಲಿದೆ. ಈಗಾಗಲೇ ಅವರ ಗೌರವಧನ ಹೆಚ್ಚಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಪ್ರಾಥಮಿಕದಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದರು.
ಇದೇ ವೇಳೆ ಕಾಂಗ್ರೆಸ್ ಶಾಸಕರ ಮತ್ತು ಸಂಸದರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ಬಗ್ಗೆ ಪ್ರತ್ರಿಯಿಸಿದ ಸಿಎಂ, ಕಾನೂನು ಪ್ರಕಾರ ಯಾವುದೇ ಕ್ರಮಗಳನ್ನು ಕೈಗೊಂಡರೂ ನಮ ವಿರೋಧ ಇಲ್ಲ. ಆದರೆ ಕಾನೂನು ಉಲ್ಲಂಘನೆಗೆ ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದರು.
Advertisement