ಕರ್ನಾಟಕದ ತೋತಾಪುರಿ ಮಾವಿಗೆ ನಿಷೇಧ: ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದನೆ; ಆಂಧ್ರ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಕರ್ನಾಟಕದ ತೋತಾಪುರಿ ಮಾವು ಖರೀದಿ ನಿಷೇಧಿಸಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಕರ್ನಾಟಕದ ತೋತಾಪುರಿ ಮಾವು ಖರೀದಿ ನಿಷೇಧಿಸಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಇದರ ಬೆನ್ನಲ್ಲೇ ಮಧ್ಯ ಪ್ರವೇಶ ಮಾಡಿದ್ದ ಕರ್ನಾಟಕ ಸರ್ಕಾರದ ಆಂಧ್ರಪ್ರದೇಶ ರಾಜ್ಯಕ್ಕೆ ಪತ್ರ ಬರೆದಿದ್ದು, ನಿಷೇಧ ಆದೇಶ ಹಿಂಪಡೆಯುವಂತೆ ಮನವಿ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದು, ಚಿತ್ತೂರು ಜಿಲ್ಲಾಡಳಿತವು ಕರ್ನಾಟಕದ ತೋತಾಪುರಿ ಮಾವು ಖರೀದಿ ಮೇಲೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಇತರ ರಾಜ್ಯಗಳಿಂದ ತೋತಾಪುರಿ ಮಾವಿನ ಹಣ್ಣುಗಳನ್ನು ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಿ ಚಿತ್ತೂರು ಜಿಲ್ಲಾಧಿಕಾರಿಗಳು ಜೂನ್ 07 ರಂದು ಆದೇಶ ಹೊರಡಿಸಿರುವುದಾಗಿ ತಿಳಿದುಬಂದಿದೆ. ಈ ಹಠಾತ್ ಮತ್ತು ಏಕಪಕ್ಷೀಯ ಕ್ರಮವು ಕರ್ನಾಟಕದ ಮಾವು ಬೆಳೆಗಾರರಿಗೆ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ ತೋತಾಪುರಿ ಮಾವನ್ನು ಬೆಳೆಯುವವರಿಗೆ ಹೆಚ್ಚಿನ ತೊಂದರೆಯನ್ನುಂಟು ಮಾಡಿದೆ.

ಈ ರೈತರು ಉತ್ಪನ್ನಗಳನ್ನು ಮಾರಾಟ ಮಾಡಲು ಚಿತ್ತೂರು ಮೂಲದ ಸಂಸ್ಕರಣಾ ಘಟಕಗಳೊಂದಿಗೆ ದೀರ್ಘಕಾಲದಿಂದ ಸಂಪರ್ಕ ಹೊಂದಿದ್ದಾರೆ. ಪ್ರಸ್ತುತ ನಿರ್ಬಂಧವು ಈ ಸುಸ್ಥಾಪಿತ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸಿದೆ ಮತ್ತು ಕೊಯ್ಲಿನ ನಂತರದ ಗಮನಾರ್ಹ ನಷ್ಟವನ್ನುಂಟು ಮಾಡಿದೆ, ಇದು ಸಾವಿರಾರು ರೈತರ ಜೀವನೋಪಾಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

CM Siddaramaiah
ತುಂಗಭದ್ರಾ ಜಲಾಶಯ ಹೂಳು ಸಮಸ್ಯೆ: ಆಂಧ್ರಪ್ರದೇಶ-ಕರ್ನಾಟಕ ಸರ್ಕಾರ ಚರ್ಚೆಗೆ ಮುಂದು!

ಪೂರ್ವ ಸಮಾಲೋಚನೆ ಅಥವಾ ಸಮನ್ವಯವಿಲ್ಲದೆ ತೆಗೆದುಕೊಳ್ಳುವ ಈ ರೀತಿಯ ಕ್ರಮಗಳು ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿವೆ. ಇದು ಉದ್ವಿಗ್ನತೆ ಮತ್ತು ಪ್ರತೀಕಾರದ ಕ್ರಮಗಳಿಗೆ ಕಾರಣವಾಗಬಹುದು ಪಾಲುದಾರರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ, ಇದು ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತರ-ರಾಜ್ಯ ಸಾಗಣೆಯನ್ನು ಅಡ್ಡಿಪಡಿಸಬಹುದು.

ಈ ವಿಷಯದಲ್ಲಿ ನೀವು (ಚಂದ್ರಬಾಬು ನಾಯ್ಡು) ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸುತ್ತೇನೆ ಮತ್ತು ಚಿತ್ತೂರು ಜಿಲ್ಲಾಡಳಿತದ ಆದೇಶವನ್ನು ತಕ್ಷಣವೇ ರದ್ದುಗೊಳಿಸಲು ಜಿಲ್ಲೆಯ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ರೈತರ ಕಲ್ಯಾಣದ ಹಿತದೃಷ್ಟಿಯಿಂದ ಕೃಷಿ ಉತ್ಪನ್ನಗಳ ಸರಾಗ ಸಾಗಣೆಯನ್ನು ಪುನಃಸ್ಥಾಪಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com