
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿ ಮೇ 27 ರಂದು ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅವರ ನಿವಾಸಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದ್ದು, ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕೊಲೆಯಲ್ಲ, ದಕ್ಷಿಣ ಕನ್ನಡದ ಸಾಮರಸ್ಯದ ಸಾಮಾಜಿಕ ವ್ಯವಸ್ಥೆಯ ಮೇಲಾಗಿರುವ ದಾಳಿ ಎಂದು ಹೇಳಿದರು.
ಪ್ರಕರಣದ ಕುರಿತು ಮುಖ್ಯಮಂತ್ರಿ, ಗೃಹ ಸಚಿವರು, ಡಿಸಿ, ಎಸ್ಪಿ ಮತ್ತು ನಗರ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ರಹಿಮಾನ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಏತನ್ಮಧ್ಯೆ, ದಕ್ಷಿಣ ಕನ್ನಡದ ಜನರಿಗೆ ಪತ್ರ ಬರೆದಿರುವ ಸ್ಪೀಕರ್, ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ಶಾಂತಿ, ಸಾಮರಸ್ಯ ಮತ್ತು ಏಕತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳು, ಮುಸ್ಲಿಮರು, ಕ್ರೈಸ್ತರೆಲ್ಲರೂ ತಲೆಮಾರುಗಳಿಂದ ಪರಸ್ಪರ ಪ್ರೀತಿ, ನಂಬಿಕೆ ಇಟ್ಟು ಒಗ್ಗಟ್ಟಿನಿಂದ ಬದುಕಿದ್ದಾರೆ. ಈಚೆಗೆ ನಡೆದ ಕೆಲ ಘಟನೆಗಳು ಎಲ್ಲರನ್ನೂ ನೋಯಿಸಿರಬಹುದು. ಆದರೂ ಮಾನವೀಯತೆಯ ವಿರುದ್ಧ ದ್ವೇಷ ಮೇಲುಗೈ ಸಾಧಿಸಲು ಬಿಡಬಾರದು. ಹಿಂಸೆಯು ಭವಿಷ್ಯವನ್ನು ವ್ಯಾಖ್ಯಾನಿಸಲು ಅವಕಾಶ ನೀಡಬಾರದು.
ನಮ್ಮ ಹಿರಿಯರು ಒಂದೇ ಶಾಲೆಯಲ್ಲಿ ಕಲಿತು, ಒಂದೇ ಮಾರುಕಟ್ಟೆಯಲ್ಲಿ ಕೆಲಸ ಮಾಡಿ, ಒಟ್ಟಿಗೆ ಹಬ್ಬ ಆಚರಿಸಿದವರು ನಾವು. ಅಂತಹ ಸಾಮರಸ್ಯದ ಜಿಲ್ಲೆಯನ್ನು ನೋಡಿ ಬೆಳೆದ ನಮಗೆ, ನಮ್ಮ ಕೈಗಳನ್ನು ಕಳೆದುಕೊಳ್ಳುವುದು ಅಸಾಧ್ಯ. ನಾವು ಇದಕ್ಕೆ ಯಾವುದೇ ಅವಕಾಶವನ್ನು ನೀಡಬಾರದು.
ಜಿಲ್ಲೆಯಲ್ಲಿ ಈಚೆಗೆ ನಡೆದ ಹಿಂಸಾಚಾರ, ದ್ವೇಷ ಭಾಷಣ ಸಮುದಾಯಗಳ ನಡುವಿನ ಆತಂಕ ಮೂಡಿಸುವ ಕೃತ್ಯಗಳು ಆಂತರಿಕವಾಗಿ ತೀವ್ರವಾಗಿ ಘಾಸಿಗೊಳಿಸಿದೆ. ನಾವೀಗ ಬಹಳ ಸೂಕ್ಷ್ಮ ಕಾಲಘಟ್ಟದಲ್ಲಿದ್ದೇವೆ. ಎಲ್ಲರ ಹೃದಯಗಳು ನೋವಿನಿಂದ ತುಂಬಿವೆ, ಮನಸ್ಸುಗಳು ಕೋಪದಿಂದ ಕುರುಡಾಗಿವೆ. ಕುದಿಯುವ ನೀರು ಹೇಗೆ ಪ್ರತಿಬಿಂಬವಾಗಲು ಸಾಧ್ಯವಿಲ್ಲವೋ ಹಾಗೆಯೇ, ಮನಸ್ಸು ಉದ್ವಿಗ್ನಗೊಂಡಾಗ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಸರಿ-ತಪ್ಪುಗಳ ವಿಶ್ಲೇಷಣೆ ಅಸಾಧ್ಯವಾಗುತ್ತದೆ. ಆದ್ದರಿಂದ ಭವಿಷ್ಯದ, ಸಾಮರಸ್ಯದ ಸಮಾಜದ ಉಳಿವಿಗಾಗಿ ನಾವು ತಾಳ್ಮೆಯಿಂದ, ಜವಾಬ್ದಾರಿಯುತವಾಗಿ, ವಿಮರ್ಶಾತ್ಮಕ ಚಿಂತನೆ, ವಿಶ್ಲೇಷಣೆ ಮಾಡಬೇಕಾಗಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿಸುವ ವದಂತಿಗಳು, ದ್ವೇಷದ ಹೇಳಿಕೆಗಳು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುತ್ತಿವೆ. ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿವೆ. ಕೋಪ, ಭಯ ಅಥವಾ ದ್ವೇಷದಿಂದ ಪ್ರತಿಕ್ರಿಯಿಸುವ ಸಮಯ ಇದಲ್ಲ. ಶಾಂತಿ, ಘನತೆ ಮತ್ತು ಪ್ರತಿಯೊಂದು ಧರ್ಮವನ್ನು ಗೌರವಿಸುವ ನಮ್ಮ ನೈತಿಕ ಮೌಲ್ಯಗಳೊಂದಿಗೆ ದೃಢವಾಗಿ ನಿಂತು ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸುವ ಸಮಯ ಇದು ಎಂದು ಅಭಿಪ್ರಾಯಪಟ್ಟಿದ್ದಾರೆ.
ದ್ವೇಷ ಹರಡುವ, ಸಮಾಜವನ್ನು ವಿಭಜಿಸಲು ಯತ್ನಿಸುವ ಶಕ್ತಿಗಳ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ಹಿನ್ನೆಲೆಯನ್ನು ಲೆಕ್ಕಿಸದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ಏನೇ ಇರಲಿ, ನಾವು ಒಗ್ಗಟ್ಟಿನಿಂದ, ತಾಳ್ಮೆಯಿಂದ, ಪರಸ್ಪರ ಪ್ರೀತಿಯಿಂದ, ವಿಶ್ವಾಸದಿಂದ, ದಯೆಯಿಂದ ಮತ್ತು ಶಾಂತಿಯಿಂದ ಇರಬೇಕಾದ ಸಮಯ ಇದು ಎಂದು ಹೇಳಿದ್ದಾರೆ.
ಎಲ್ಲಾ ಧರ್ಮಗಳ ಮುಖಂಡರು ಮತ್ತು ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅರ್ಥಪೂರ್ಣ ಮಾತುಕತೆಯ ಮೂಲಕ ಸಮಾಜದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದ್ದೇನೆ. ನಾವು ಈಗ ಎಚ್ಚರಿಕೆಯಿಂದ ವರ್ತಿಸಬೇಕ -ಪರಿಸ್ಥಿತಿಯನ್ನು ಮತ್ತಷ್ಟು ಗೊಂದಲಗೊಳಿಸುವ ಬದಲು, ಶಾಂತಿಯತ್ತ ಸಾಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದ್ದಾರೆ.
Advertisement