
ಬೆಂಗಳೂರು: ನಟಿ ರನ್ಯಾ ರಾವ್ ಭಾಗಿಯಾಗಿರುವ ಚಿನ್ನ ಕಳ್ಳಸಾಗಣೆ ಪ್ರಕರಣವು ದೇಶದ ಇತಿಹಾಸದಲ್ಲಿಯೇ ಅತ್ಯಂತ ಅಪರೂಪದ ಪ್ರಕರಣವಾಗಿದ್ದು, ಈ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಇಬ್ಬರು ಸಚಿವರು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಸೋಮವಾರ ಹೇಳಿದ್ದಾರೆ.
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.
ಬೆಂಗಳೂರಿನ ಸುತ್ತಲೂ ಕೇಂದ್ರೀಕೃತವಾಗಿರುವ ಈ ಪ್ರಕರಣವು ರಾಜ್ಯ ಸರ್ಕಾರದ ಪ್ರಭಾವಿ ವ್ಯಕ್ತಿಗಳ ಸುತ್ತ ಅನುಮಾನ ಹುಟ್ಟುಹಾಕಿದೆ. ಪ್ರಕರಣದಲ್ಲಿ ಇಬ್ಬರು ಸಚಿವರು ಭಾಗಿಯಾಗಿರುವ ಕುರಿತು ವರದಿಯಾಗಿದ್ದು, ಇದು ತುಂಬಾ ಕಳವಳಕಾರಿ ಬೆಳವಣಿಗೆ. ಇದು ಹವಾಲಾ ವಹಿವಾಟುಗಳಿಗೆ ಸಂಬಂಧಿಸಿದೆ ಎಂದು ತನಿಖೆ ಬಹಿರಂಗಪಡಿಸಿದೆ. ತಮ್ಮ ಬಂಧನವಾದ ವೇಳೆ ರನ್ಯಾ ರಾವ್ ಕಾಂಗ್ರೆಸ್ ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ಪ್ರಭಾವಿ ವ್ಯಕ್ತಿಗಳ ಭಾಗಿಯಾಗಿರುವ ಬಗ್ಗೆ ಬಲವಾದ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ.
ರನ್ಯಾ ರಾವ್ ಅವರು ಉನ್ನತ ಪೊಲೀಸ್ ಅಧಿಕಾರಿಯ ಮಗಳಾಗಿರುವುದರಿಂದ, ಇಡೀ ವ್ಯವಸ್ಥೆಯ ಸಮಗ್ರತೆಯು ಈಗ ಪರಿಶೀಲನೆಗೆ ಒಳಗಾಗಿದ್ದು, ರಾಜ್ಯಕ್ಕೆ ಅಪಖ್ಯಾತಿ ತರುತ್ತಿದೆ. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳು ಪ್ರಕರಣದ ಬಗ್ಗೆ ಸತ್ಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ಸಚಿವರು ನಿಜವಾಗಿಯೂ ಭಾಗಿಯಾಗಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಇದರ ಬಗ್ಗೆ ತಿಳಿದಿರುತ್ತದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು, ಅಪರಾಧಿಗಳನ್ನು ಬಹಿರಂಗಪಡಿಸಬೇಕು ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಹಾಗೆ ಮಾಡಲು ವಿಫಲವಾದರೆ ಇಡೀ ಆಡಳಿತವು ಈ ಹಗರಣದ ಕಲೆಯನ್ನು ಹೊರಬೇಕಾಗುತ್ತದೆ. ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿಯನ್ನು ಎತ್ತಿಹಿಡಿಯಬೇಕು ಮತ್ತು ನ್ಯಾಯಕ್ಕೆ ಜಯ ಸಿಗುವಂತೆ ಮಾಡಬೇಕು. ಹಿಂದಿನ ಹಗರಣಗಳಂತೆ ಸರ್ಕಾರವು ಭ್ರಷ್ಟರನ್ನು ರಕ್ಷಿಸಲು ಪ್ರಯತ್ನಿಸಿದರೆ, ಅದು ಅನಿವಾರ್ಯವಾಗಿ ಮುಜುಗರವನ್ನು ಎದುರಿಸಬೇಕಾಗುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದ್ದು, ಎಲ್ಲ ಸತ್ಯಗಳು ಹೊರಬರುತ್ತವೆ. ಈ ಪ್ರಕರಣವು ಕೇವಲ ಒಬ್ಬ ನಟಿಗೆ ಸೀಮಿತವಾಗಿಲ್ಲ; ತನಿಖೆಯು ಈಗಾಗಲೇ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶಾಲ ಜಾಲವನ್ನು ಬಹಿರಂಗಪಡಿಸಿದೆ' ಎಂದು ವಿಜಯೇಂದ್ರ ಹೇಳಿದರು.
ರನ್ಯಾ ರಾವ್ ಒಂದೇ ದಿನದಲ್ಲಿ 12.36 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ ಅವರು ಎಷ್ಟು ಚಿನ್ನವನ್ನು ಕಳ್ಳಸಾಗಣೆ ಮಾಡಿರಬಹುದು? ಈ ಕಳ್ಳಸಾಗಣೆ ಜಾಲದಲ್ಲಿ ಇನ್ನೂ ಎಷ್ಟು ಜನರು ಭಾಗಿಯಾಗಿದ್ದಾರೆ? ಕಾರ್ಯಾಚರಣೆಯ ಪೂರ್ಣ ವ್ಯಾಪ್ತಿಯನ್ನು ಬಹಿರಂಗಪಡಿಸಲು ಆಳವಾದ ತನಿಖೆ ಅಗತ್ಯವಿದೆ. ಸಿಬಿಐ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವುದರಿಂದ ತಾರ್ಕಿಕ ಅಂತ್ಯ ಕಾಣುವ ವಿಶ್ವಾಸವಿದೆ ಎಂದು ತಿಳಿಸಿದರು.
ಈಮಧ್ಯೆ, ಬಿಜೆಪಿ ನಾಯಕ ಭರತ್ ಶೆಟ್ಟಿ, 'ಚಿನ್ನ ಕಳ್ಳಸಾಗಣೆ ಪ್ರಕರಣವು ಖಚಿತ ಅಪರಾಧ. ಪ್ರಕರಣದಲ್ಲಿ ಸಿಲುಕಿಬಿದ್ದ ವೇಳೆ ಹೊರಬರಲು ಅವರು ವಿವಿಧ ಕಾಂಗ್ರೆಸ್ ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಈಗ ಇಬ್ಬರು ಸಚಿವರು ಭಾಗಿಯಾಗಿದ್ದಾರೆ ಮತ್ತು ಅವರು ಪ್ರಕರಣದಿಂದ ಹೊರಬರಲು ಸಹಾಯ ಮಾಡಲು ಪ್ರಯತ್ನಿಸಿದ್ದಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈಗ, ಸಿಬಿಐ ಪ್ರಕರಣವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ ಮತ್ತು ಖಂಡಿತವಾಗಿಯೂ ತನಿಖೆಯಿಂದ ಸತ್ಯ ಹೊರಬರುತ್ತದೆ' ಎಂದಿದ್ದಾರೆ.
Advertisement