ಗದಗ: ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು; ಏಳು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು!

ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಗೆ ಸ್ಥಳಾಂತರಿಸಲಾಗಿದೆ.
School girls, who fell ill after they were sprayed with spurious colour, being taken to a hospital in Gadag on Friday.
ಅಸ್ವಸ್ಥರಾದ ಶಾಲಾ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.(Photo | Express)
Updated on

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ್ದರಿಂದ ಕನಿಷ್ಠ ಏಳು ಶಾಲಾ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಗೆ ಸ್ಥಳಾಂತರಿಸಲಾಗಿದೆ. ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂತ್ರಸ್ತರ ಪೋಷಕರು ಆಸ್ಪತ್ರೆಗೆ ಧಾವಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ವಿದ್ಯಾರ್ಥಿನಿಯರು ಲಕ್ಷ್ಮೇಶ್ವರ ಪಟ್ಟಣದ ಸುವರ್ಣಗಿರಿ ತಾಂಡಾ ಬಳಿಯ ಬಸ್ ನಿಲ್ದಾಣದಲ್ಲಿ ಶಾಲೆಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದರು. ಏಕೆಂದರೆ, ಅವರೆಲ್ಲರೂ ಇಂದು ಪರೀಕ್ಷೆ ಬರೆಯಬೇಕಾಗಿತ್ತು.

ಈ ವೇಳೆ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳ ಗುಂಪೊಂದು ಬಸ್ ನಿಲ್ದಾಣದ ಬಳಿ ನಿಂತಿದ್ದ ವಿದ್ಯಾರ್ಥಿನಿಯರ ಮೇಲೆ ಬಣ್ಣ ಎರಚಲು ಪ್ರಾರಂಭಿಸಿದ್ದಾರೆ. ಅದೇ ವೇಳೆಗೆ ಶಾಲಾ ಬಸ್ ಬರುತ್ತಿದ್ದಂತೆ ಬಾಲಕಿಯರು ಬಸ್ ಹತ್ತಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಆ ಗುಂಪು ಬೈಕ್‌ಗಳಲ್ಲಿ ಬಸ್ ಅನ್ನು ಹಿಂಬಾಲಿಸಿದೆ. ಬಳಿಕ ಬಸ್ ಹತ್ತಿ ಏಳು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ರಾಸಾಯನಿಕ ಲೇಪಿತ ಬಣ್ಣಗಳನ್ನು ಎರಚಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯಲ್ಲಿ ಆ ದ್ರವದಲ್ಲಿ ಸಗಣಿ, ಮೊಟ್ಟೆ, ಫೀನಾಲ್ ಮತ್ತು ಬಣ್ಣಗಳ ಮಿಶ್ರಣವಿತ್ತು ಎಂದು ತಿಳಿದುಬಂದಿದೆ. ಬಾಲಕಿಯರಿಗೆ ಅರಿವಿಲ್ಲದೆಯೇ ಸಣ್ಣ ಪ್ರಮಾಣದ ದ್ರವ ಒಳಗಡೆ ಹೋಗಿದ್ದು, ಇದರಿಂದಾಗಿ ಅವರಿಗೆ ಉಸಿರಾಟದ ತೊಂದರೆ ಮತ್ತು ಇತರ ಲಕ್ಷಣಗಳು ಕಂಡುಬಂದಿವೆ. ಅಸ್ವಸ್ಥರಾದ ವಿದ್ಯಾರ್ಥಿನಿಯನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ಪೋಷಕರಿಗೆ ಭರವಸೆ ನೀಡಿದ್ದಾರೆ.

ಆರೋಪಿಗಳು ಬೈಕ್‌ಗಳಲ್ಲಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರು ಅವರನ್ನು ಪತ್ತೆಹಚ್ಚಲು ಸ್ಥಳೀಯರು ಮತ್ತು ಶಾಲಾ ಬಸ್‌ನಲ್ಲಿದ್ದ ಇತರರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳು ಹೊರಬರುವ ನಿರೀಕ್ಷೆಯಿದೆ. ಪ್ರಕರಣದ ಕುರಿತು ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com