
ಬೆಂಗಳೂರು: SCSP/TSP ಅನುದಾನಗಳನ್ನು ಬಳಸಿಕೊಂಡು ತಮ್ಮ ಸಮುದಾಯದ ಜನಗಣತಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಜಾತಿಯ ಸಚಿವರು ಹಾಗೂ ನಾಯಕರು ಆಗ್ರಹಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ನಿವಾಸದಲ್ಲಿ ನಾಯಕರು ಸಭೆ ನಡೆಸಿದರು, ಸೋಮವಾರ ಸಂಜೆ ಮತ್ತೊಂದು ಸಭೆ ನಡೆಯುವ ಸಾಧ್ಯತೆ ಇದ್ದು, ನಂತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮತ್ತು ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಸರ್ಕಾರಿ ಉದ್ಯೋಗ ಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು.
ನಂತರ, ರಾಜ್ಯ ಸಚಿವ ಸಂಪುಟವು ಅಕ್ಟೋಬರ್ 29 ರಂದು ಒಳ ಮೀಸಲಾತಿ ಜಾರಿಗೆ ಅನುಮೋದನೆ ನೀಡಿತು. ನವೆಂಬರ್ 13 ರಂದು ಮಾಜಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗವನ್ನು ಸ್ಥಾಪಿಸಿ ಪ್ರಾಯೋಗಿಕ ದತ್ತಾಂಶವನ್ನು ಸಂಗ್ರಹಿಸಿ ಮೂರು ತಿಂಗಳ ಗಡುವು ನೀಡುವ ಮೂಲಕ ಮೀಸಲಾತಿ ರಚನೆಯನ್ನು ಅಂತಿಮಗೊಳಿಸಿತು.
ಆಯೋಗವು ಇನ್ನೂ ಸರ್ಕಾರಕ್ಕೆ ತನ್ನ ವರದಿಯನ್ನು ನೀಡಿಲ್ಲ. ಕೇಂದ್ರವು 2011 ರಲ್ಲಿ ನಡೆಸಿದ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಜನಗಣತಿಯನ್ನು ಅದರ ಸಿಂಧುತ್ವವನ್ನು ಪರಿಗಣಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಗೊಂದಲವಿದೆ.
ಜಾತಿ ಜನಗಣತಿ ದತ್ತಾಂಶ ಎಂದು ಕರೆಯಲ್ಪಡುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ-ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ವರದಿಯನ್ನು ಸಾರ್ವಜನಿಕಗೊಳಿಸಿದ್ದರೆ, ಅದನ್ನು ಪರಿಗಣಿಸಲಾಗುತ್ತಿತ್ತು. ಸರ್ಕಾರವು ವರದಿಯನ್ನು ಬಹಿರಂಗಗೊಳಿಸಲು ಅಥವಾ ಸಚಿವ ಸಂಪುಟದಲ್ಲಿ ಮಂಡಿಸಲು ಹಿಂದೇಟು ಹಾಕುತ್ತಿದ್ದು, ಎಸ್ಸಿ ನಾಯಕರು ಎಸ್ಸಿ/ಎಸ್ಟಿಗಳ ಪ್ರತ್ಯೇಕ ಜನಗಣತಿ ನಡೆಯುವಂತೆ ಆಗ್ರಹಿಸುತ್ತಿದ್ದಾರೆ. ಜನಗಣತಿಯನ್ನು ಪೂರ್ಣಗೊಳಿಸಲು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಸಮಯ ಬೇಕಾಗಬಹುದು ಎಂದು ನಾಯಕರೊಬ್ಬರು ಹೇಳಿದ್ದಾರೆ.
ಒಳಮೀಸಲಾತಿ ಅನುಷ್ಠಾನದಲ್ಲಿ ವಿಳಂಬವಾಗಿರುವುದರಿಂದ ಸರ್ಕಾರವು ವಿವಿಧ ಇಲಾಖೆಗಳಲ್ಲಿ ನೇಮಕಾತಿಯನ್ನು ನಿಲ್ಲಿಸಿದೆ.
ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳಿಗೆ ಹಣಕಾಸು ಒದಗಿಸಲು SCSP/TSP ಅನುದಾನಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದ್ದು, ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇದರ ನಡುವೆ SCSP/TSP ಅನುದಾನಗಳನ್ನು ಜಾತಿ ಜನಗಣತಿಗೆ ಬಳಸುವಂತೆ ಎಸ್'ಸಿ ನಾಯಕರು ಒತ್ತಾಯಿಸುತ್ತಿದ್ದಾರೆ.
Advertisement