
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ತರುಣ್ ರಾಜು ಅವರಿಗೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ನಿರಾಕರಿಸಿದೆ.
ಜಾಮೀನು ಕೋರಿ ತರುಣ್ ರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ.
ನಟಿ ರನ್ಯಾ ರಾವ್ ಸ್ನೇಹಿತ ತರುಣ್ ರಾಜು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ ಡಿಆರ್ಐ ಪರ ವಿಶೇಷ ಸರಕಾರಿ ಅಭಿಯೋಜಕ(ಎಸ್ಪಿಪಿ) ಮಧು ಎನ್. ರಾವ್, ರನ್ಯಾ ಹಾಗೂ ತರುಣ್ ನಡುವಣ ಚಿನ್ನ ಸ್ಮಗ್ಲಿಂಗ್, ನಿರಂತರ ದುಬೈ ಪ್ರಯಾಣದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿದರು.
ಪ್ರಕರಣದ ಮೊದಲ ಆರೋಪಿ ರನ್ಯಾ 2023 ಹಾಗೂ 2025ರ ನಡುವಣ ಅವಧಿಯಲ್ಲಿ ಸುಮಾರು 52 ಬಾರಿ ದುಬೈಗೆ ಹೋಗಿ ಬಂದಿದ್ದಾರೆ. ಈ ಪೈಕಿ 26 ಬಾರಿ ತರುಣ್ ಜತೆ ಒಟ್ಟಿಗೆ ಹೋಗಿ ಬಂದಿದ್ದಾರೆ. ಈ ನಿರಂತರ ಪ್ರಯಾಣದ ಗುಟ್ಟನ್ನು ಭೇದಿಸಬೇಕಿದೆ ಎಂದು ಹೇಳಿದರು.
ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.
Advertisement