
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿದಿದ್ದು, ರಾತ್ರಿ 8 ಗಂಟೆ ಸುಮಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಇಂದು ಸಂಜೆ ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು. ಈ ಎಚ್ಚರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದ್ದು, ಇಂದೂ ಸಹ ರಾತ್ರಿ ಭಾರಿ ಮಳೆಯಾಗಿದೆ.
ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಗಾಳಿ, ಮಳೆಗೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ನಗರ ಹಲವು ರಸ್ತೆಗಳಲ್ಲಿ ನಿಧಾನಗತಿಯ ಸಂಚಾರವಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಭಾರಿ ಮಳೆ
ಇನ್ನು ಇಂದು ನಗರದ ಹಲವೆಡೆ ಭಾರಿ ಮಳೆಯಾಗಿದ್ದು, ಬೆಂಗಳೂರಿನ ಹಂಪಿನಗರದಲ್ಲಿ 55, ರಾಜರಾಜೇಶ್ವರಿ ನಗರ 50, ನಾಯಂಡಹಳ್ಳಿ 45, ವಿದ್ಯಾಪೀಠ ಜಂಕ್ಷನ್ 45, ಹೊರಮಾವು 31, ಹೆರೋಹಳ್ಳಿ 29, ಪುಲಿಕೇಶಿನಗರ 27 ಎಂಎಂ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ
ಇನ್ನು ಸಂಜೆ ಹವಾಮಾನ ಇಲಾಖೆ ಮಳೆ ಕುರಿತು ಮುನ್ಸೂಚನೆ ನೀಡಿತ್ತು. ಬೆಂಗಳೂರಿನ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ 3 ದಿನ ಮಳೆ ಸಾಧ್ಯತೆ
ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಗರದಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮೇ 02 ರಿಂದ ಮೇ 04, ರವರೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement