
ಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡುಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಜತೆಗಿನ ಸಭೆಯ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಸರಣಿ ಹತ್ಯೆಗಳಾಗುತ್ತಿದ್ದರೆ ಸಮಾಜ ಎಲ್ಲಿಗೆ ಹೋಗಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಯಾರ ತುಷ್ಠೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಮುಂದಿನ ಕ್ರಮದ ಬಗ್ಗೆ ಸಿಎಂ, ಗೃಹ ಸಚಿವರು ಚರ್ಚೆ ಮಾಡ್ತಾರೆ. ಬಿಜೆಪಿ ನಾಯಕರ ಹೇಳಿಕೆಗಳನ್ನು ಗಮನಿಸಿದ್ದೇನೆ. ಮಂಗಳೂರಿನಲ್ಲಿ ಶಾಂತಿ ಸ್ಥಾಪನೆಗೆ ಸಹಕಾರ ಕೊಡಬೇಕು.
ಬಿಜೆಪಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷ. ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗಬಾರದು ಎಂದರು. ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ.
ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ ಎಂದು ಮನವಿ ಮಾಡಿದ್ದಾರೆ. ನಮಗೆ ಕೊಲೆಯಾದ ಅಶ್ರಫ್ ಒಂದೇ, ಸುಹಾಸ್ ಕೂಡಾ ಒಂದೇ. ಆಶ್ರಫ್ ಕೊಲೆ ಬಗ್ಗೆ ಇವರು ಯಾಕೆ ಮಾತನಾಡಲಿಲ್ಲ? ಮುಸಲ್ಮಾನ್ ಅಂತ ಮಾತನಾಡಲ್ವ? ಯಾರೇ ತಪ್ಪು ಮಾಡಿದ್ರು ತಪ್ಪೇ ಎಂದರು.
Advertisement