ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ನಿಷೇಧಾಜ್ಞೆ ಜಾರಿ

2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಮಂಗಳೂರು ಪೊಲೀಸ್ (ಸಂಗ್ರಹ ಚಿತ್ರ)
ಮಂಗಳೂರು ಪೊಲೀಸ್ (ಸಂಗ್ರಹ ಚಿತ್ರ)
Updated on

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023, ಸೆಕ್ಷನ್ 163, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಲು ಸಂಬಂಧಿಸಿದೆ. ಇದು ಸಾರ್ವಜನಿಕ ತೊಂದರೆ ಅಥವಾ ಅಪಾಯಕಾರಿ ಸಂದರ್ಭಗಳನ್ನು ತಡೆಗಟ್ಟಲು ಆದೇಶಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ಗಳಿಗೆ ನೀಡುತ್ತದೆ. ಈ ವಿಭಾಗವು ಹಿಂದಿನ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 1973ರ ಸೆಕ್ಷನ್ 144ರ ಹೊಸ ರೂಪವಾಗಿದೆ.

ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಕೊಚ್ಚಿ ಗುರುವಾರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮಂಗಳೂರು ಪೊಲೀಸ್ (ಸಂಗ್ರಹ ಚಿತ್ರ)
Mangaluru: ಹಿಂದೂಪರ ಕಾರ್ಯಕರ್ತನ ಹತ್ಯೆ; ಕ್ಯಾಮೆರಾದಲ್ಲಿ ಭೀಕರ ದಾಳಿ ಸೆರೆ!

ಬಜಪೆಯ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಸುರತ್ಕಲ್‌ನಲ್ಲಿ 2022ರ ಜುಲೈ 28ರಂದು ನಡೆದಿದ್ದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್‌ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ತಿಳಿದುಬಂದಿದೆ.

‘ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್‌, ಪ್ರಜ್ವಲ್‌, ಅನ್ವಿತ್‌, ಲತೀಶ್‌ ಹಾಗೂ ಶಶಾಂಕ್‌ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್‌ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿತ್ತು.

ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಕೊನೆಯುಸಿರೆಳೆದಿದ್ದ ಎಂದು ವರದಿಗಳು ತಿಳಿಸಿವೆ.

ಇನ್ನು ಘಟನೆಯಲ್ಲಿ ಸುಹಾಸ್‌ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದು, ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com