
ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂಬ ಗಾಯಕ ಸೋನಿ ನಿಗಮ್ ಅವರು ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು. ಇದರ ಬೆನ್ನಲ್ಲೇ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ದೂರು ದಾಖಲಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ಸೋನು ನಿಗಮ್ ಅವರು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಏಪ್ರಿಲ್ 25 ಹಾಗೂ 26ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳು ವಿಡಿಯೊದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಬೆಂಗಳೂರಿನ ಕಾಲೇಜು ಒಂದರ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದು, ಅದು ಸಾಮಾನ್ಯ ಕೂಡ ಆಗಿತ್ತು.
ಆದರೆ, ಈ ವೇಳೆ ತಾಳ್ಮೆ ಕಳೆದುಕೊಂಡ ಸೋನು ಅವರು, ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಸೋನು ನಿಗಮ್ ಅವರ ಕುರಿತು ಟೀಕೆ-ವಿರೋಧಗಳು ವ್ಯಕ್ತವಾಗುತ್ತಿರುವುದಲ್ಲದೇ, ಬ್ಯಾನ್ ಮಾಡಬೇಕೆಂಬ ಆಗ್ರಹಗಳೂ ವ್ಯಕ್ತವಾಗುತ್ತಿವೆ.
Advertisement