
ಕಲಬುರಗಿ: ದೇಶದ ಏಕತೆಗಾಗಿ ಮೋದಿ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದ್ದಾರೆ.
ಶನಿವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಏಕತೆಗಾಗಿ ಮೋದಿ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ. ಆದರೆ, ಕೇಂದ್ರ ಸರ್ಕಾರ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕೇವಲ ಭಾಷಣ ಮಾಡಿಕೊಂಡು ಕುಳಿತುಕೊಂಡರೆ ಸಾಲದು. ನಮ್ಮ ದೇಶದವರನ್ನು ಕೆಣಕಿದವರಿಗೆ ತಕ್ಕ ಉತ್ತರ ಕೊಡಬೇಕು. ಈ ವಿಚಾರದಲ್ಲಿ ರಾಜಕೀಯ ಆಗಬಾರದು. ನಮ್ಮ ದೇಶವನ್ನು ಅವಮಾನಿಸಿದರೆ ನಾವು ಮೌನವಾಗಿರಲು ಸಾಧ್ಯವಿಲ್ಲ. ನಮ್ಮ ದೇಶ ನಮಗೆ ಮುಖ್ಯವಾದ ಕಾರಣ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ನಾವು ಬೆಂಬಲ ನೀಡುತ್ತಿದ್ದೇವೆಂದು ಹೇಳಿದರು.
ಜನಗಣತಿಯ ಜೊತೆಗೆ ಜಾತಿ ಜನಗಣತಿ ನಡೆಸುವ ಕೇಂದ್ರದ ನಿರ್ಧಾರದ ಬಗ್ಗೆ ಮಾತನಾಡಿ, ಕಾಂಗ್ರೆಸ್ ಈ ಹಿಂದೆ ಜಾತಿ ಜನಗಣತಿಯನ್ನು ಒತ್ತಾಯಿಸಿತ್ತು, ಈ ವೇಳೆ ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ನಮ್ಮನ್ನು ಹೀಯಾಳಿಸಿದ್ದರು. ಈಗ ಅವರೇ, ಜಾತಿ ಜನಗಣತಿ ಮಾಡಲು ಹೊರಟಿದ್ದಾರೆ. ಬಿಹಾರ ಚುನಾವಣೆ ಗಿಮಿಕ್ ಇರಬಹುದು. ಆ ಕುರಿತು ಮಾತನಾಡುವುದಿಲ್ಲ. ದುರುದ್ದೇಶದಿಂದ ನಡೆದುಕೊಂಡರೆ ಯಾರೂ ಸಹಿಸುವುದಿಲ್ಲ ಎಂದು ತಿಳಿಸಿದರು.
Advertisement