Anti-communal task force ಮೂಲಕ ಹಿಂದೂ ಕಾರ್ಯಕರ್ತರ ದಮನಿಸಲು ಕಾಂಗ್ರೆಸ್ ಹುನ್ನಾರ: ಯಶ್ಪಾಲ್ ಸುವರ್ಣ ಆರೋಪ

ಜಿಲ್ಲೆಗೆ ಆಗಮಿಸಿದ ಸಚಿವರೂ ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಜಿಲ್ಲೆಯ ಶಾಂತಿ ಸುವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸುವ ಕನಿಷ್ಠ ಸೌಜನ್ಯ ತೋರಿಸಿಲ್ಲ.
Yashpal Suvarna
ಉಡುಪಿ ಶಾಸಕ ಯಶ್ಪಾಲ್ ಸುವರ್ಣ
Updated on

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಆ್ಯಂಟಿ ಕಮ್ಯುನಲ್ ಫೋರ್ಸ್ ಆರಂಭಿಸುವ ಮೂಲಕ ಹಿಂದೂ ಕಾರ್ಯಕರ್ತರನ್ನು ದಮನಿಸಲು ಕಾಂಗ್ರೆಸ್ ಪಿತೂರಿ ನಡೆಸಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ರವರು ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಸಿ ಅವರ ಒತ್ತಡಕ್ಕೆ ಮಣಿದು ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆಗೆ ಮುಂದಾಗಿದ್ದಾರೆ. ಈ ಮೂಲಕ ಮತೀಯವಾದಿ ಶಕ್ತಿಗಳ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದರು.

ಗೃಹ ಸಚಿವರ ಸಭೆಯಲ್ಲಿ ಮುಸ್ಲಿಂ ಮುಖಂಡರು ಮೇಜು ಗುದ್ದಿ ಉದ್ಧಟತನ ಮೆರೆದರೂ ಪೊಲೀಸ್ ಇಲಾಖೆ ಮೌನಕ್ಕೆ ಶರಣಾಗಿದೆ. ಜಿಲ್ಲೆಗೆ ಆಗಮಿಸಿದ ಸಚಿವರೂ ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಜಿಲ್ಲೆಯ ಶಾಂತಿ ಸುವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸುವ ಕನಿಷ್ಠ ಸೌಜನ್ಯ ತೋರಿಸಿಲ್ಲ.

ಈ ಹಿಂದೆ ಕರಾವಳಿ ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಜಾಲವನ್ನು ಮಟ್ಟಹಾಕಲು ಪೊಲೀಸ್ ಇಲಾಖೆಯಲ್ಲಿ ಡ್ರಗ್ಸ್ ನಿಯಂತ್ರಣ ವಿಶೇಷ ಘಟಕ ರಚನೆ ಬಗ್ಗೆ ಮನವಿಗೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ ಇದೀಗ ಹಿಂದೂ ಕಾರ್ಯಕರ್ತರನ್ನು ದಮನಿಸಲು ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆಗೆ ತುದಿಗಾಲಲ್ಲಿ ನಿಂತಿದೆ. ಇದರಿಂದ ಕರಾವಳಿ ಜಿಲ್ಲೆಯನ್ನು ರಾಷ್ಟ್ರಮಟ್ಟದಲ್ಲಿ ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಿ ಕರಾವಳಿ ಜಿಲ್ಲೆಯ ಆರ್ಥಿಕ ಸಾಮಾಜಿಕ ಅಭಿವೃದ್ಧಿಗೆ ಕೊಳ್ಳಿ ಇಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

Yashpal Suvarna
2 ವಾರಗಳಲ್ಲಿ 'ಕೋಮು ವಿರೋಧಿ ಕಾರ್ಯಪಡೆ ರಚನೆ': ಗೃಹ ಸಚಿವ ಪರಮೇಶ್ವರ್

ಸ್ಪೀಕರ್ ಯುಟಿ ಖಾದರ್ ರವರು ತನಿಖೆ ನಡೆಯುವ ಸಂದರ್ಭದಲ್ಲಿಯೇ ಈ ಹತ್ಯೆಯಲ್ಲಿ ಫಾಸಿಲ್ ಕುಟುಂಬಸ್ಥರ ಕೈವಾಡ ಇಲ್ಲ ಹೇಳಿಕೆ ನೀಡಿದ್ದಾರೆ. ಆದರೆ, ಇದೀಗ ಫಾಸಿಲ್ ಸಹೋದರನೇ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ತನಿಖೆಯ ಮೇಲೆ ಪ್ರಭಾವ ಬೀರಿದ ಖಾದರ್ ರವರು ತಕ್ಷಣ ರಾಜೀನಾಮೆ ನೀಡಬೇಕೆಂದ ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯ ಮೇಲೆ ಜಿಲ್ಲೆಯ ಜನತೆಗೆ ಯಾವುದೇ ವಿಶ್ವಾಸ ಉಳಿದಿಲ್ಲ. ಸುಹಾಸ್ ಕೊಲೆ ಪ್ರಕರಣಕ್ಕೆ ಸಹಕಾರ ನೀಡಿದ ಬುರ್ಖಾಧಾರಿ ಮಹಿಳೆ, ಹಣಕಾಸು ಸಹಕಾರ ನೀಡಿದ ವ್ಯಕ್ತಿಗಳು ಹಾಗೂ ಆರೋಪಿಗಳಿಗೆ ನಿಷೇಧಿತ ಸಂಘಟನೆಯ ಜೊತೆ ಇರುವ ಸಂಪರ್ಕಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಪ್ರಕರಣವನ್ನು ಪ್ರವೀಣ್ ನೆಟ್ಟಾರ್ ಪ್ರಕರಣದ ರೀತಿಯಲ್ಲಿ ಎನ್ಐಎ ತನಿಖೆಗೆ ರಾಜ್ಯ ಸರ್ಕಾರ ತಕ್ಷಣ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com