
ಎಚ್.ಡಿ.ಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಭಾರತಿಯ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಅದನ್ನು ಘೋಷಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಎರಡೂ ದೇಶಗಳ ಸೇನಾಧಿಕಾರಿಗಳ ಸಭೆ ಇದೆ. ಅಲ್ಲಿ ಏನು ತೀರ್ಮಾನ ಆಗುತ್ತದೆಯೋ ನೋಡೋಣ ಎಂದರು. 1971ರ ಯುದ್ಧಕ್ಕೂ- ಇವತ್ತಿನ ಸಂದರ್ಭಕ್ಕೂ ಹೋಲಿಕೆ ಮಾಡಿ ನಾನು ಮಾತನಾಡುವುದಿಲ್ಲ. ಆಗಿನ ಪರಿಸ್ಥಿತಿಗಳೇ ಬೇರೆ, ಇವತ್ತಿನ ಪರಿಸ್ಥಿತಿಗಳೇ ಬೇರೆ. ಟ್ರಂಪ್ ಟ್ವಿಟ್ ಬಗ್ಗೆಯಾಗಲಿ, ಪಾಕಿಸ್ತಾನದವರು ಮಾಡಿದ ಕದನ ವಿರಾಮ ಉಲ್ಲಂಘನೆಯ ಬಗ್ಗೆಯಾಗಲಿ ನಾನು ಮಾತನಾಡುವುದಿಲ್ಲ ಎಂದರು.
ಯುದ್ಧ ವಿರಾಮ ಘೋಷಣೆಗೂ ಮುನ್ನ ಸರ್ವ ಪಕ್ಷಗಳ ಸಭೆ ಕರೆಯಬೇಕಿತ್ತು. ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಬಹುದಿತ್ತು ಎಂದು ಹೇಳಿದರು. ರಾಜ್ಯದಲ್ಲಿನ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಹೊರಗೆ ಕಳುಹಿಸಿದ್ದೇವೆ. ಮೈಸೂರಿನಲ್ಲಿ ಮೂವರು ಮಕ್ಕಳು ಮಾತ್ರ ಇದ್ದಾರೆ. ಅವರನ್ನು ಹೊರಗೆ ಕಳುಹಿಸಲು ತಾಂತ್ರಿಕ ಸಮಸ್ಯೆ ಇವೆ. ಗಂಡ ಪಾಕಿಸ್ತಾನಿ, ಹೆಂಡತಿ ಮೈಸೂರಿನವಳು. ಆದ್ದರಿಂದ ಮಕ್ಕಳು ಮಾತ್ರ ಇಲ್ಲೇ ಇದ್ದಾರೆ ಎಂದು ಪ್ರತಿಕ್ರಿಯಿಸಿದರು.
ಸರ್ಕಾರದ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತೇವೆ. ಯುದ್ಧ ವಿರಾಮ ಘೋಷಣೆ ಆಗಿರುವ ಕಾರಣ ಈ ಕಾರ್ಯಕ್ರಮ ನಡೆಸುತ್ತೇವೆ. ನುಡಿದಂತೆ ನಡೆದ ಸರ್ಕಾರ ಇದ್ದರೆ ಅದು ನಮ್ಮದು ಮಾತ್ರ. ಇದೇ ನಮ್ಮ ಸರ್ಕಾರದ ಯಶಸ್ಸು ಎಂದರು.
Advertisement